ಬೆಂಗಳೂರು: ಓಬಳಾಪುರಂ ಮೈನಿಂಗ್ ಪ್ರಕರಣದಲ್ಲಿ ಸಿಬಿಐ ವಿಶೇಷ ಕೋರ್ಟ್ ನಿಂದ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ಗಾಲಿ ಜರ್ನಾದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ.
ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆ ವಿಧಿಸಿದ್ದ ಸಿಬಿಐ ವಿಶೇಷ ಕೋರ್ಟ್ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರು ಸ್ಥಾಪಿಸಿದ್ದಾರೆ.
ಓಬಳಾಪುರಂ ಮೈನಿಂಗ್ ಕಂಪನಿ(ಒಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ನಿಯಮದಂತೆ ಏಳು ವರ್ಷ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನ ರದ್ದುಗೊಂಡಿತ್ತು.
ಆದರೆ ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ಜನಾರ್ದನ ರೆಡ್ಡಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ಈ ಶಿಕ್ಷೆಗೆ ತಡೆ ನೀಡಿದೆ. ಅಷ್ಟೇ ಅಲ್ಲದೆ, ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರಿಗೆ ಜಾಮೀನು ನೀಡಿದೆ.