ನಟಿ ರನ್ಯಾ ರಾವ್ 
ರಾಜ್ಯ

ಬೆಂಗಳೂರು: ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಫ್ಲ್ಯಾಟ್ ತಪಾಸಣೆ; ಅಪಾರ ಪ್ರಮಾಣದ ನಗದು, ಚಿನ್ನ ವಶ!

ದುಬೈನಿಂದ ಸೋಮವಾರ ರಾತ್ರಿ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ತಪಾಸಣೆ ಮಾಡಿದಾಗ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ನಟಿಯನ್ನು ಬಂಧಿಸಲಾಗಿತ್ತು.

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಬೆಂಗಳೂರಿನ ನಿವಾಸದ ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಬುಧವಾರ ದಾಳಿ ನಡೆಸಿ ಅಪಾರ ಪ್ರಮಾಣದ ನಗದು ಮತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದೆ.

ದುಬೈನಿಂದ ಸೋಮವಾರ ರಾತ್ರಿ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ತಪಾಸಣೆ ಮಾಡಿದಾಗ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ನಟಿಯನ್ನು ಬಂಧಿಸಲಾಗಿತ್ತು.

ರನ್ಯಾ ಅವರ ಲ್ಯಾವೆಲ್ಲೆ ರಸ್ತೆಯಲ್ಲಿರುವ ಐಷಾರಾಮಿ ಫ್ಲಾಟ್‌ನಿಂದ 2.06 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು 2.67 ಕೋಟಿ ರೂಪಾಯಿ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆ ಫ್ಲಾಟ್‌ಗೆ ನಟಿ 4.5 ಲಕ್ಷ ರೂಪಾಯಿ ಬಾಡಿಗೆ ಪಾವತಿಸುತ್ತಿದ್ದರು ಎಂದು ಎಂದು ವರದಿಯಾಗಿದೆ.

32 ವರ್ಷದ ರನ್ಯಾ ರಾವ್ ಅವರು ಪೊಲೀಸ್ ಮಹಾನಿರ್ದೇಶಕ (ಪೊಲೀಸ್ ವಸತಿ ನಿಗಮ) ರಾಮಚಂದ್ರ ರಾವ್ ಅವರ ಪುತ್ರಿ. ಆದರೆ, ನಾಲ್ಕು ತಿಂಗಳ ಹಿಂದೆ ನಟಿ ಮದುವೆಯಾದಾಗಿನಿಂದ ಅವರಿಬ್ಬರೂ ಸಂಪರ್ಕದಲ್ಲಿಲ್ಲ ಎನ್ನಲಾಗಿದೆ.

ದುಬೈನ ಚಿನ್ನ ಕಳ್ಳಸಾಗಣೆ ಜಾಲದಲ್ಲಿ ಕನ್ನಡದ ನಟಿಯೊಬ್ಬರು ಸಕ್ರಿಯರಾಗಿರುವ ಬಗ್ಗೆ ಡಿಆರ್ ಐ ಅಧಿಕಾರಿಗಳಿಗೆ ಕೆಲವು ದಿನಗಳ ಹಿಂದಷ್ಟೇ ಮಾಹಿತಿ ದೊರೆತಿತ್ತು. ಪದೇ ಪದೆ ದುಬೈಗೆ ಹೋಗಿ ಬರುತ್ತಿದ್ದ ರನ್ಯಾ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದರು. ಕಳೆದ 15 ದಿನಗಳಲ್ಲಿ ರನ್ಯಾ ರಾವ್ ಅವರು ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದರು.

ಪೊಲೀಸರ ಪ್ರಕಾರ, ಸೋಮವಾರ ರಾತ್ರಿ ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಬಂದಿಳಿದ ನಂತರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಟಿಯನ್ನು ಬಂಧಿಸಲಾಯಿತು. ನಟಿ ದುಬೈನಿಂದ ಎಮಿರೇಟ್ಸ್ ವಿಮಾನ ಹತ್ತಿದ್ದಾರೆ ಎಂಬ ಮಾಹಿತಿ ಪಡೆದ ನಾಲ್ವರು ಡಿಆರ್‌ಐ ಅಧಿಕಾರಿಗಳ ತಂಡ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾಯ್ದು ಕುಳಿತಿದ್ದರು.

ನಟಿ ರನ್ಯಾ ಅವರು ಡಿಜಿಪಿ ಹೆಸರನ್ನು ಬಳಸಿಕೊಂಡು ತನ್ನ ಬೆಲ್ಟ್ ಮತ್ತು ಬಟ್ಟೆಯಲ್ಲಿ ಬಚ್ಚಿಟ್ಟು ಚಿನ್ನದ ತುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಆಕೆಯ ಪಿಕ್-ಅಪ್‌ಗಾಗಿ ಪೊಲೀಸ್ ಸಿಬ್ಬಂದಿ ಬರುತ್ತಿದ್ದರು. ನಂತರ ಆಕೆಯ ಮನೆಗೆ ಕರೆದೊಯ್ಯುತ್ತಿದ್ದರು. ಯಾವುದೇ ಪೊಲೀಸ್ ಸಿಬ್ಬಂದಿ ಅಥವಾ ಐಪಿಎಸ್ ಅಧಿಕಾರಿ ಚಿನ್ನ ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಡಿಆರ್‌ಐ ಈಗ ತನಿಖೆ ನಡೆಸುತ್ತಿದೆ. ಈ ಹಿಂದೆಯೂ ಆಕೆ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆಯೇ ಎಂಬ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಆಕೆಯ ಬಂಧನದ ನಂತರ, ಆಕೆಯನ್ನು ವಿಚಾರಣೆಗಾಗಿ ಬೆಂಗಳೂರಿನ ಡಿಆರ್‌ಐ ಪ್ರಧಾನ ಕಚೇರಿಗೆ ಕರೆದೊಯ್ದು, ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯನ್ನು ವಶಕ್ಕೆ ನೀಡುವಂತೆ ಡಿಆರ್‌ಐ ಅಧಿಕಾರಿಗಳು ಕೋರದ ಕಾರಣ ಮಾರ್ಚ್ 18ರವರೆಗೆ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಿಕ್ಕಮಗಳೂರಿನವರಾದ ರನ್ಯಾ ಅವರು 2014ರಲ್ಲಿ ಕಿಚ್ಚ ಸುದೀಪ್ ನಟನೆಯ 'ಮಾಣಿಕ್ಯ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು. ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪಟಾಕಿ ಚಿತ್ರದಲ್ಲಿ ನಟಿಸಿದ್ದಾರೆ. ಇದಲ್ಲದೆ ತಮಿಳು ಸಿನಿಮಾದಲ್ಲಿಯೂ ರನ್ಯಾ ಬಣ್ಣ ಹಚ್ಚಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT