ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ನಡೆಸಲಾಗುವುದು. ಅಪೆಕ್ಸ್ ಬ್ಯಾಂಕ್ ಉಳಿಸುವುದು ನಮ್ಮ ಉದ್ದೇಶ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ಸಂಜೆ ಕೆಲವು ಮಂತ್ರಿಗಳು ಹಾಗೂ ಶಾಸಕರ ಸಭೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ರಾಜಣ್ಣ ಅವರು ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿದ್ದು, ಸಭೆಗೆ ಗೈರು ಹಾಜರಾಗಿದ್ದರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, "ಕೆ.ಎನ್.ರಾಜಣ್ಣ ಅವರಿಗೆ ಅನಾರೋಗ್ಯದ ಕಾರಣಕ್ಕೆ ಸಭೆಗೆ ಬರಲು ಆಗಲಿಲ್ಲ. ವಿಧಾನಸಭೆಯಲ್ಲಿ ಅವರು ಇದ್ದರು ಎಂದು ಕೇಳಲ್ಪಟ್ಟೆ. ನಮಗೆಲ್ಲಾ ವಯಸ್ಸಾಗಿದೆ, ನನಗೂ ಕತ್ತು ನೋವು ಬಂದಿದೆ. ಇದೆಲ್ಲಾ ಈ ವಯಸ್ಸಿನಲ್ಲಿ ಸರ್ವೇ ಸಾಮಾನ್ಯ." ಎಂದರು.
ಮುಖ್ಯಮಂತ್ರಿಗಳು, ನಾನು ಹಾಗೂ ಕೆಲವು ಸಚಿವರು ಸೇರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತೀರ್ಮಾನ ಮಾಡಲಾಗಿದೆ" ಎಂದರು.
ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ವೇಳೆ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೇ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವರಾದ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ. ಈ ಸಂದರ್ಭದಲ್ಲಿ ಈ ಭಾಗದ ಶಾಸಕರ ಸಭೆ ಕರೆದು ಮಾತನಾಡಬೇಕಿದೆ. ರಾತ್ರಿ 7-8 ಗಂಟೆಯ ಮೇಲೆ ಈ ಕರಾವಳಿ ಭಾಗ ಸ್ಥಬ್ಧವಾಗುತ್ತದೆ. ಯಾವುದೇ ಕಾರ್ಯಚಟುವಟಿಕೆ ಇರುವುದಿಲ್ಲ. ಧಾರ್ಮಿಕವಾದ ಭಜನೆ, ಬಯಲಾಟ ಹೊರತಾಗಿ ಬೇರೆ ಯಾವುದೇ ಚಟುವಟಿಕೆ ಇರುವುದಿಲ್ಲ. ಈ ವಿಚಾರವಾಗಿ ಅಲ್ಲಿನ ಶಾಸಕರೇ ಕೂತು ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ನೀಡಬೇಕು. ಕಳೆದ ಕೆಲವು ವರ್ಷಗಳಿಂದ ಈ ಭಾಗದಲ್ಲಿ ಮಕ್ಕಳು ಶಾಲಾ ಕಾಲೇಜುಗಳಿಗೆ ಸೇರ್ಪಡೆಯಾಗುವ ಪ್ರಮಾಣವೂ ಕುಸಿಯುತ್ತಿದೆ. ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜು ನಡೆಸುವವರು ಈ ವಿಚಾರವಾಗಿ ನಮ್ಮ ಬಳಿ ಚರ್ಚೆ ಮಾಡುತ್ತಿದ್ದಾರೆ” ಎಂದರು.
ಈ ಮಧ್ಯೆ ರಾತ್ರಿ 8ರ ನಂತರ ಏನು ಮಾಡಬೇಕು ಎಂದು ನೀವೇ ಸಲಹೆ ನೀಡಿ ಶಾಸಕ ಅರವಿಂದ್ ಬೆಲ್ಲದ್ ಅವರು ಕೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ರಾತ್ರಿ 7-8 ಗಂಟೆ ನಂತರ ಮಂಗಳೂರು ಸ್ಥಬ್ಧವಾಗಿದೆ ಎಂದರೆ ಮಂಗಳೂರಿನ ಜನ ಹೆಚ್ಚಾಗಿ ಮನೆಯಿಂದಾಚೆ ಬರುವುದಿಲ್ಲ. ಹೀಗಾದರೆ ಯಾವ ಆರ್ಥಿಕ ವಹಿವಾಟು ನಡೆಯುತ್ತದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಕರಾವಳಿ ಭಾಗದಲ್ಲಿ ಐಟಿ ಬಿಟಿ ಸ್ಥಾಪಿಸಲು ಪ್ರಸ್ತಾವನೆ ನೀಡಿತು. ಆದರೆ ಅಲ್ಲಿ ಒಂದೇ ಒಂದು ಕಾಂಪ್ಲೆಕ್ಸ್ ಕೂಡ ಇರಲಿಲ್ಲ.
ಈಗ ಮೂರೋ, ನಾಲ್ಕೋ ತಲೆ ಎತ್ತುತ್ತಿವೆ. ರಾಜ್ಯದಲ್ಲಿ ಅತಿ ಹೆಚ್ಚು ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು ಇರುವುದೆಲ್ಲ ಅಲ್ಲೇ. ಅಲ್ಲಿರುವ ಪ್ರತಿಭೆಗಳೆಲ್ಲವೂ ಬೆಂಗಳೂರು, ಮುಂಬೈ ಹಾಗೂ ಹೊರದೇಶಗಳಿಗೆ ಹೋಗುತ್ತಿದ್ದಾರೆ. ಯಾಕೆ ಈ ಪರಿಸ್ಥಿತಿ ಇದೆ? ಯಾವುದೇ ನಗರದಲ್ಲಿ ಮನರಂಜನೆಗೆ ಅವಕಾಶವಿಲ್ಲದಿದ್ದರೆ ಅಲ್ಲಿ ಯುವಕರು ಆಸಕ್ತಿ ತೋರುವುದಿಲ್ಲ. ಹೀಗಾಗಿ ಅಲ್ಲಿನ ಶಾಸಕರು ಕೂತು ಚರ್ಚೆ ಮಾಡಿ. ಈ ವಿಚಾರವಾಗಿ ನಾನು ಹಾಗೂ ಪ್ರವಾಸೋದ್ಯಮ ಸಚಿವರಿಬ್ಬರೂ ಸೇರಿ ಜಿಲ್ಲೆಯ ಎಲ್ಲಾ ಶಾಸಕರ ಜತೆ ಪ್ರತ್ಯೇಕವಾಗಿ ಸಭೆ ಮಾಡುತ್ತೇವೆ” ಎಂದು ತಿಳಿಸಿದರು.