ಡಿ ಕೆ ಶಿವಕುಮಾರ್  
ರಾಜ್ಯ

ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ: ಬಿಜೆಪಿಯಿಂದ ರಾಜಕೀಯ ದೌರ್ಜನ್ಯ; ತೆಲಂಗಾಣದಲ್ಲಿ ಮುಂದಿನ ಜೆಎಸಿ ಸಭೆ; ಡಿ.ಕೆ ಶಿವಕುಮಾರ್

ಇದು ದಕ್ಷಿಣ ಹಾಗು ಉತ್ತರ ಭಾರತದ ನಡುವಿನ ಜಗಳವಲ್ಲ. ಭಾರತದ ಸಾರ್ವಭೌಮತ್ವವನ್ನು ಕಾಪಾಡುವ ಜವಾಬ್ದಾರಿ.

ಚೆನ್ನೈ: ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಹಾಗೂ ಒಕ್ಕೂಟ ವ್ಯವಸ್ಥೆ ಮೇಲಿನ ವ್ಯವಸ್ಥಿತ ದಾಳಿ ಮತ್ತು ಬೆದರಿಕೆ. ಈ ವಿಚಾರದ ಮೇಲೆ ಜೆಎಸಿಯ ಬಲವರ್ಧನೆಗೆ ದೆಹಲಿಯಲ್ಲಿ ಕಚೇರಿ ಸ್ಥಾಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಮುಂದಿನ ಸಭೆ ತೆಲಂಗಾಣದಲ್ಲಿ ನಡೆಯಲಿದೆ" ಎಂದರು.

"ಪಂಜಾಬ್, ಕೇರಳ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ವಿವಿಧ ಪಕ್ಷಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದಿಂದ ನಾನು, ತೆಲಂಗಾಣ ಹಾಗೂ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಭಾಗವಹಿಸಿದ್ದೆವು. ಕಾಂಗ್ರೆಸ್ ಹೈಕಮಾಂಡ್ ಸಹ ಈ ವಿಚಾರವಾಗಿ ಸಹಮತ ವ್ಯಕ್ತಪಡಿಸಿದೆ" ಎಂದು ಹೇಳಿದರು.

"ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಯಾವುದೇ ಭಾಗದಲ್ಲಿಯೂ ಸಂಸತ್ ಸ್ಥಾನಗಳು ಕಡಿಮೆಯಾಗಲು ನಾವು ಬಿಡುವುದಿಲ್ಲ. ಒರಿಸ್ಸಾ ಮಾಜಿ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಅವರು ಸಹ ಆನ್ ಲೈನ್ ಮೂಲಕ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ" ಎಂದು ಹೇಳಿದರು.

ಇದು ದಕ್ಷಿಣ ಹಾಗು ಉತ್ತರ ಭಾರತದ ನಡುವಿನ ಜಗಳವಲ್ಲ. ಭಾರತದ ಸಾರ್ವಭೌಮತ್ವವನ್ನು ಕಾಪಾಡುವ ಜವಾಬ್ದಾರಿ. ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಈ ವಿಚಾರವನ್ನು ರಾಷ್ಟ್ರಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು. ಇದರ ಬಗ್ಗೆ ಚರ್ಚೆಯಾಗಬೇಕು.‌ ನಮ್ಮ ಒಕ್ಕೂಟ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡಬೇಕು ಎಂದು ಹೇಳಿದ್ದಾರೆ" ಎಂದು ತಿಳಿಸಿದರು.

"ಒಟ್ಟಾಗಿ ತೆರಿಗೆ ಹಾಗೂ ಅನುದಾನ ಅನ್ಯಾಯದ ಬಗ್ಗೆ ಒಗ್ಗಟ್ಟಾಗಿ ದನಿ ಎತ್ತಬೇಕು. 2002 ರಲ್ಲಿ 84 ನೇ ತಿದ್ದುಪಡಿ ವೇಳೆ ವಾಜಪೇಯಿ ಅವರು ಅಂದು ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರ ನಡೆದುಕೊಳ್ಳಬೇಕು” ಎಂದು ತಿಳಿಸಿದರು.

ತಮಿಳುನಾಡಿನಲ್ಲಿ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, "ತಮಿಳುನಾಡಿನಲ್ಲಿ ಯಾವುದೇ ಸ್ಥಾನಗಳು ಇಲ್ಲದ ಕಾರಣಕ್ಕೆ ಮಾತನಾಡುತ್ತಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಕಪ್ಪು ಬಾವುಟ ತೋರಿಸುತ್ತೇವೆ ಎಂದು ಹೇಳಿದ್ದರು.‌ ನಾನು ಸಹ ತೋರಿಸಲಿ ಎಂದು ಕಾಯುತ್ತಿದ್ದೇನೆ. ಕಪ್ಪು ಬಾವುಟ ಶನಿಯ ಸಂಕೇತ. ತಮಿಳುನಾಡಿನ ಗಡಿಯಲ್ಲಿ ಇರುವ ಶನೇಶ್ವರ ದೇವಸ್ಥಾನಕ್ಕೆ ನಾನು ಆಗಾಗ್ಗೆ ಭೇಟಿಕೊಡುತ್ತಾ ಇರುತ್ತೇನೆ. ಇದು ಶನಿಯ ಸಂಕೇತ" ಎಂದರು.

ಕ್ಷೇತ್ರಗಳು ಕಡಿಮೆಯಾಗಲು ಜನಸಂಖ್ಯೆಯೇ ಕಾರಣವಾಗುತ್ತಿದೆಯೇ ಎಂದಾಗ, "ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಜನಸಂಖ್ಯೆ ನಿಯಂತ್ರಣಕ್ಕೆ ನಾವು ಆದ್ಯತೆ ಕೊಟ್ಟಿದ್ದೆವು. ಈಗ ಅದೇ ಕಾರಣಕ್ಕೆ ಗುರಿಯಾಗಿದ್ದೇವೆ" ಎಂದರು. ಹೆಚ್ಚು ಮಕ್ಕಳು ಮಾಡಿಕೊಳ್ಳಿ ಎಂದು ನಾನು ಕರೆ ನೀಡುವುದಿಲ್ಲ. ಏಕೆಂದರೆ ಅದು ಆಯಾಯ ಸಂಸಾರದ ವೈಯಕ್ತಿಕ ವಿಚಾರ. ಎಷ್ಟು ಮಕ್ಕಳನ್ನು ಹೊಂದಬೇಕು ಎನ್ನುವುದನ್ನು ಹೇರಬಾರದು" ಎಂದರು.

ಮೇಕೆದಾಟು ವಿಚಾರವಾಗಿ ಕೇಳಿದಾಗ, "ನಾನು ರಾಜಕೀಯ ಸಭೆಗೆ ಬಂದಿದ್ದೇನೆ. ಅದರ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಮೇಕೆದಾಟು ಅಣೆಕಟ್ಟಿನಿಂದ ಹೆಚ್ಚು ತಮಿಳುನಾಡಿಗೆ ಉಪಯೋಗವಿದೆ ನಂತರ ಕರ್ನಾಟಕಕ್ಕೆ" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT