ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಿರುವ ನೋಟಿಸ್ ಅನುಸಾರ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಈ ಸಂಬಂಧ ಎಚ್.ಡಿ.ಕುಮಾರ ಸ್ವಾಮಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಬಳಿಕ ಕೋರ್ಟ್, ಮಾರ್ಚ್ 27ರವರೆಗೂ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಹೇಳಿಕೆ ದಾಖಲಿಸಿಕೊಂಡು ವಿಚಾರಣೆಯನ್ನು ಮಾರ್ಚ್ 27ಕ್ಕೆ ನಿಗದಿಪಡಿಸಿದೆ. ಇದರಿಂದ ಕುಮಾರಸ್ವಾಮಿ ಕೊಂಚ ನಿರಾಳರಾಗಿದ್ದಾರೆ.
ವಿಚಾರಣೆ ವೇಳೆ ಕುಮಾರಸ್ವಾಮಿ ಪರ ಪದಾಂಕಿತ ಹಿರಿಯ ವಕೀಲ ಉದಯ ಹೊಳ್ಳ ಮಂಡಿಸಿದ ವಾದವನ್ನು ಪುರಸ್ಕರಿಸಿದ ನ್ಯಾಯಪೀಠ, ‘ಮುಂದಿನ ಆದೇಶದವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಪ್ರತಿವಾದಿಗಳಾದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ರಾಮನಗರ ತಾಲ್ಲೂಕು ತಹಶೀಲ್ದಾರ್ ಅವರಿಗೆ ಆದೇಶಿಸಿತು. ಕುಮಾರಸ್ವಾಮಿ ಪರ ಹೈಕೋರ್ಟ್ ವಕೀಲ ಎ.ವಿ.ನಿಶಾಂತ್ ವಕಾಲತ್ತು ವಹಿಸಿದ್ದಾರೆ.
‘ಕೇತಗಾನಹಳ್ಳಿ ಸರ್ವೇ ನಂಬರ್ 7 ಮತ್ತು 8ರಲ್ಲಿ ಪೋಡಿ ದುರಸ್ತಿಯಾಗದ ಜಮೀನಿನಲ್ಲಿ ನೀವು ಅನಧಿಕೃತವಾಗಿ ಒತ್ತುವರಿ ಮಾಡಿ ಸ್ವಾಧೀನಾನುಭವ ಹೊಂದಿದ್ದೀರಿ. ಹಾಗಾಗಿ, ಕರ್ನಾಟಕ ಭೂ ಕಂದಾಯ ಕಾಯ್ದೆ–1964ರ ಕಲಂ 94ರ ಅಡಿಯಲ್ಲಿ ಏಕೆ ನಿಮ್ಮಿಂದ ದಂಡ ವಸೂಲಿ ಮಾಡಬಾರದು ಎಂಬುದಕ್ಕೆ ಸಮಜಾಯಿಷಿ ನೀಡಿ. ಈ ಕುರಿತಂತೆ ನಿಮ್ಮ ಬಳಿ ಇರುವ ದಾಖಲೆಗಳನ್ನು ಸಲ್ಲಿಸಿ. ಇಲ್ಲವಾದಲ್ಲಿ ಕಾನೂನು ರೀತ್ಯಾ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ರಾಮನಗರ ತಾಲ್ಲೂಕು ತಹಶೀಲ್ದಾರ್ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇದೇ 18ರಂದು ಒತ್ತುವರಿ ತೆರವು ನೋಟಿಸ್ ನೀಡಿದ್ದರು.