ಸಂಗ್ರಹ ಚಿತ್ರ 
ರಾಜ್ಯ

ಮೂಲಸೌಕರ್ಯ ಕೊರತೆಯಿರುವ ಪ್ಯಾರಾ ಮೆಡಿಕಲ್ ಕಾಲೇಜುಗಳ ಬಂದ್'ಗೆ ಸರ್ಕಾರ ಆದೇಶ..!

ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ.

ಬೆಂಗಳೂರು: ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜುಗಳ ಬಂದ್ ಮಾಡುವಂತೆ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಸಚಿವರು, ಹಲವಾರು ಖಾಸಗಿ ಕಾಲೇಜುಗಳಲ್ಲಿನ ನ್ಯೂನತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಥೋಡ್ ಮತ್ತು ಪ್ಯಾರಾ-ಮೆಡಿಕಲ್ ಮಂಡಳಿಯ ವಿಶೇಷ ಅಧಿಕಾರಿ ಡಾ. ವಿಜಯ್ ಕುಮಾರ್ ಸೇರಿದಂತೆ ಅಧಿಕಾರಿಗಳು ಹಲವಾರು ಕಾಲೇಜುಗಳಲ್ಲಿರುವ ಲೋಪಗಳ ಕುರಿತು ಸಚಿವರಿಗೆ ಮಾಹಿತಿ ನೀಡಿದರು.

ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ವರದಿ ನೀಡಿದರು.

ಯಾವುದೇ ಅನುಮತಿಯಿಲ್ಲದೆ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ವಿದ್ಯಾರ್ಥಿಗಳ ವರ್ಗಾವಣೆ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ತೀವ್ರ ಅಸಂಗತತೆಗಳು ತಪಾಸಣೆ ವೇಳೆ ಪತ್ತೆಯಾಗಿವೆ ಎಂದು ತಿಳಿಸಿದರು.

ಖಾಸಗಿ ಸಂಸ್ಥೆಗಳು ಅನುಮೋದನೆ ಪಡೆಯುವಾಗ ದಾರಿ ತಪ್ಪಿಸುವ ಮಾಹಿತಿ ನೀಡುತ್ತಿವೆ. ಭಾರಿ ಶುಲ್ಕವನ್ನು ವಿಧಿಸುತ್ತಿದ್ದರೂ ಅನುಮತಿಸಿದ ಗುಣಮಟ್ಟದ ಶಿಕ್ಷಣವನ್ನು ನೀಡಲು ವಿಫಲವಾಗಿವೆ. ರಾಜ್ಯದ 566 ಪ್ಯಾರಾ-ಮೆಡಿಕಲ್ ಕಾಲೇಜುಗಳಲ್ಲಿ 529 ಖಾಸಗಿಯಾಗಿ ನಡೆಸಲ್ಪಡುತ್ತಿದ್ದು, 2024-25 ಶೈಕ್ಷಣಿಕ ವರ್ಷದಲ್ಲಿ 22,256 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಖಾಸಗಿ ಕಾಲೇಜುಗಳು ಮೂರು ವರ್ಷಗಳ ಕೋರ್ಸ್‌ಗೆ ವಾರ್ಷಿಕವಾಗಿ 20,000 ರೂ. ಶುಲ್ಕ ವಿಧಿಸುತ್ತವೆ, ಸರ್ಕಾರಿ ಸಂಸ್ಥೆಗಳು 8,500 ರೂ. ಶುಲ್ಕ ಪಡೆಯುತ್ತಿವೆ.

10ಕ್ಕೂ ಹೆಚ್ಚು ಕಾಲೇಜುಗಳು ಪ್ಯಾರಾ-ಮೆಡಿಕಲ್ ಮಂಡಳಿಯ ಅನುಮೋದನೆಯಿಲ್ಲದೆ ವಿದ್ಯಾರ್ಥಿಗಳನ್ನು ಇತರ ಸಂಸ್ಥೆಗಳಿಗೆ ಅಕ್ರಮವಾಗಿ ವರ್ಗಾಯಿಸಿರುವುದು ಬಹಿರಂಗವಾಗಿದೆ. ಹಲವಾರು ಸಂಸ್ಥೆಗಳು ದಾಖಲಾದ ಕೋರ್ಸ್‌ಗಳಿಗೆ ಅಗತ್ಯವಾದ ಬೋಧನೆ, ತರಬೇತಿಯನ್ನು ನೀಡುವಲ್ಲಿ ವಿಫಲವಾಗಿರುವುದು ಕಂಡುಬಂದಿದೆ ಎಂದು ತಿಳಿಸಿದರು.

ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಯಾವುದೇ ಪರಿಗಣನೆಯಿಲ್ಲದೆ ಅಂತಹ ಕಾಲೇಜುಗಳನ್ನು ಬಂದ್ ಮಾಡಿ. ಇದರ ಕುರಿತು ಬಲವಾದ ಸಂದೇಶ ರವಾನೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು,

ಸರ್ಕಾರ ಈ ಕ್ರಮಗಳಿಂದ ಸಮಸ್ಯೆಗೊಳಗಾಗುವ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಥೆಗಳಲ್ಲಿ ಅವಕಾಶ ನೀಡಲಾಗುವುದು ಎಂದು ಇದೇ ವೇಳೆ ಸಚಿವರು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT