ಬೆಂಗಳೂರು: ರಾಮನಗರ ಜಿಲ್ಲೆಯ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಿಟ್ಟಮಾರನಹಳ್ಳಿ ಬೈ-ಪಾಸ್ನಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮೈಸೂರು ಕಡೆಗೆ ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ.
ಮೃತರನ್ನು ಬೆಂಗಳೂರಿನ ಶಿವಪ್ರಕಾಶ್ (37) ಪುಟ್ಟಗೌರಮ್ಮ (72) ಮತ್ತು ಚನ್ನಪಟ್ಟಣದ ಮಂಗದಹಳ್ಳಿಯ ಶಿವರತ್ನ (50) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ನಟರಾಜು (42) ಮತ್ತು ಸುಮಾ (36) ಗಾಯಗೊಂಡಿದ್ದಾರೆ.
ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ವ್ಯಾನ್ ಚಾಲಕ ನಾಗೇಶ್ ಕೂಡ ಗಾಯಗೊಂಡಿದ್ದಾರೆ.