ನವಲಗುಂದ ಬೈಪಾಸ್ ರಸ್ತೆ ನಕ್ಷೆ 
ರಾಜ್ಯ

₹ 327 ಕೋಟಿ ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರದಿಂದ ಅನುಮೋದನೆ

ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ (alignment) ಮತ್ತು DPR (ವಿವರವಾದ ಯೋಜನಾ ವರದಿ) ಅನ್ನು ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ (Alignment Approval Committee (AAC) ಅನುಮೋದನೆ ನೀಡಿದೆ.

ನವದೆಹಲಿ: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್‌ ರಸ್ತೆ ₹327 ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ರಾಜ್ಯ ಸರ್ಕಾರ ಟೆಂಡರ್ ಕರೆದು ಕಾರ್ಯಾರಂಭ ಮಾಡುವ ಹಂತ ತಲುಪಿದೆ. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ (alignment) ಮತ್ತು DPR (ವಿವರವಾದ ಯೋಜನಾ ವರದಿ) ಅನ್ನು ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ (Alignment Approval Committee (AAC) ಅನುಮೋದನೆ ನೀಡಿದೆ. ನವಲಗುಂದ ಪಟ್ಟಣಕ್ಕೆ 10.575 ಕಿ.ಮೀ. ವಿಸ್ತೀರ್ಣದ ಬೈಪಾಸ್‌ ರಸ್ತೆ ನಿರ್ಮಾಣವಾಗಲಿದೆ ಎಂದು ಅವರು ಹೇಳಿದ್ದಾರೆ.

ಬೆಣ್ಣೆಹಳ್ಳ ಮತ್ತು ಅದನ್ನು ಸೇರುವ ಸಣ್ಣ ನಾಲಾಗಳು ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಪರಿಸ್ಥಿತಿ ಎದುರಾಗುತ್ತಿತ್ತು. ಇದರಿಂದ ಅಪಾರ ಕೃಷಿ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸುತ್ತಿತ್ತು ಮತ್ತು ಅನೇಕ ಕಡೆ ಸಂಪರ್ಕ ಕಡಿತಗೊಳ್ಳುತ್ತಿತ್ತು. ಇದನ್ನೆಲ್ಲ ಗಮನಿಸಿ ಶಾಶ್ವತ ಪರಿಹಾರ ಎನ್ನುವಂತೆ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಸಿದ ಪ್ರಯತ್ನಕ್ಕೆ ಇದೀಗ ಫಲ ಸಿಕ್ಕಿದೆ ಎಂದಿದ್ದಾರೆ.

ಹೆದ್ದಾರಿಯು ನವಲಗುಂದ ಪಟ್ಟಣದ ಮಧ್ಯ ಭಾಗದಿಂದ ಹಾದು ಹೋಗುವ ಕಾರಣ ಟ್ರಾಫಿಕ್ ಸಮಸ್ಯೆಗಳಿಂದಾಗಿ ಪಟ್ಟಣಿಗರು ರೋಸಿ ಹೋಗಿದ್ದರು. ಹೀಗಾಗಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬಹು ವರ್ಷಗಳಿಂದಲೂ ಇದ್ದ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಹೆದ್ದಾರಿ ಸಚಿವ ನಿತಿನ ಗಡ್ಕರಿ ಅವರು ಸ್ಪಂದಿಸಿದ್ದಾರೆ. ಈ ಮೂಲಕ ಜನರ ಆಶಯ ಸಾಕಾರಗೊಂಡಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ಆರಾಧ್ಯ ದೈವ ಸವದತ್ತಿ ಯಲ್ಲಮ್ಮ ದೇವಸ್ಥಾನ ಸೇರಿದಂತೆ ವಿವಿಧ ಐತಿಹಾಸಿಕ, ಧಾರ್ಮಿಕ ನಗರಗಳಿಗೆ ಸಂಪರ್ಕ ಜೋಡಿಸುತ್ತದೆ ನವಲಗುಂದ ಪಟ್ಟಣ. ಹೀಗಾಗಿ ಈ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರುತ್ತದೆ. ಬೈಪಾಸ್ ರಸ್ತೆ ನಿರ್ಮಾಣದಿಂದ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳಿಗೂ ಅನುಕೂಲವಾಗಲಿದೆ ಎಂದಿದ್ದಾರೆ.

ಶೀಘ್ರ ಕಾಮಗಾರಿಗೆ ಒತ್ತಾಯ: ನವಲಗುಂದ ಬೈಪಾಸ್‌ ನಿರ್ಮಾಣ ಸಂಬಂಧ ಈಗಾಗಲೇ ಡಿಪಿಆ‌ರ್ ಸಿದ್ಧಗೊಂಡಿದ್ದು, ರಾಜ್ಯ ಸರ್ಕಾರ ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳಿಗೆ ತ್ವರಿತ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ-ಕುಷ್ಟಗಿ ನೂತನ ಎಕ್ಸ್‌ಪ್ರೆಸ್‌ ರೈಲ್ವೆಗೆ ಅನುಮೋದನೆ: ಹುಬ್ಬಳ್ಳಿ-ಕುಷ್ಟಗಿ ಮಧ್ಯೆ ನೂತನ ಎಕ್ಸ್‌ಪ್ರೆಸ್‌ ರೈಲ್ವೆ ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಲ್ಲಿ ಮನವಿ ಮಾಡಿದ್ದೆ. ಇದೀಗ ಸ್ಪಂದಿಸಿದ್ದಾರೆ. ನಾಳೆ(ಮೇ 15) ಬೆಳಗ್ಗೆ 10.30ಕ್ಕೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಕುಷ್ಟಗಿಯಿಂದ‌ ಹುಬ್ಬಳ್ಳಿಗೆ ಸಂಚರಿಸುವ ನೂತನ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ-ಕುಷ್ಟಗಿ ಎಕ್ಸ್‌ಪ್ರೆಸ್‌ ರೈಲು ಪ್ರತಿನಿತ್ಯ ಸಂಚರಿಸಲಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

SCROLL FOR NEXT