ಸುರಂಗ ರಸ್ತೆ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಡಿಕೆ ಶಿವಕುಮಾರ್ 
ರಾಜ್ಯ

ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಹಾಗೂ ಮೊದಲ ಹಂತದ ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್

ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದು ತಿಳಿಸಿದರು.

ಬೆಂಗಳೂರು: ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಹಾಗೂ ಬೆಂಗಳೂರಿನಲ್ಲಿ ಮೊದಲ ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಇಂದು ಸುರಂಗ ರಸ್ತೆ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಡಿಸಿಎಂ, ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದರು.

ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.

ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾ ಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ ಎಂದರು.

ಇನ್ನು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದು ತಿಳಿಸಿದರು.

ಕೆಆರ್​ಎಸ್​ನಲ್ಲಿ ಕಾವೇರಿ ಆರತಿ

ಗಂಗಾ ಆರತಿ ಮಾದರಿಯಲ್ಲಿ ಮಂಡ್ಯದ ಕೆಆರ್​ಎಸ್​ನಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕಾಗಿ ಕಾವೇರಿ ನಿಗಮದಿಂದ 92 ಕೋಟಿ ತೆಗೆದಿರಿಸಲಾಗಿದೆ. ಇಂಧನ, ಪ್ರವಾಸೋದ್ಯಮ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಕೂಡ ನಮ್ಮ ಜೊತೆ ಕೈ ಜೋಡಿಸುತ್ತಿವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು. 10 ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು ಎಂದು ಡಿಸಿಎಂ ತಿಳಿಸಿದರು.

ಕಾವೇರಿ ಆರತಿ ನಮ್ಮ ರಾಜ್ಯದ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಲಿದೆ. ಕೊಡಗು, ಮಲೆನಾಡು, ಕರಾವಳಿ, ಬೆಂಗಳೂರು ಭಾಗದ ಆಚರಣೆ, ಈ ಭಾಗದ ಮಠಗಳನ್ನು ಒಳಗೊಂಡು ಈ ಕಾರ್ಯಕ್ರಮದ ವಿಧಾನ ರೂಪಿಸಲಾಗುವುದು. ವಾರಾಂತ್ಯದ ಮೂರು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಬೇಕು ಎಂದು ನಾನು ಆಲೋಚಿಸುತ್ತಿದ್ದೇನೆ. ಪೂಜಾ ಕಾರ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ಈ ಕಾರ್ಯಕ್ರಮ ದಕ್ಷಿಣ ಭಾರತದ ಕಾರ್ಯಕ್ರಮವಾಗಲಿದೆ. ಕಾವೇರಿ ನದಿ ಹರಿಯುವ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ಈ ಎಲ್ಲಾ ವಿಚಾರಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬಹುತೇಕ ಎಲ್ಲಾ ನೀಲನಕ್ಷೆಗಳು ಸಿದ್ಧವಾಗಿವೆ. ಇವು ಪೂರ್ಣಗೊಂಡ ನಂತರ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು ಎಂದು ಡಿಸಿಎಂ ವಿವರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT