ಬೆಂಗಳೂರು: ರಾಜ್ಯದಲ್ಲಿ ಒಂದೇ ವರ್ಷದಲ್ಲಿ 700 ಬಾಲ್ಯವಿವಾಹಗಳಾಗಿವೆ. ಇದು ನಿಮ್ಮ ಗಮನಕ್ಕೆ ಬಂದಿದೆಯೇ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ನಿಮಗೆ ದಕ್ಷತೆ ಇಲ್ಲವೇ? ಇದಕ್ಕೆ ಕಡಿವಾಣ ಹಾಕಲು ಕಾನೂನು ಇದ್ದರೂ ಬಳಸದಿರುವುದು ತಪ್ಪಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳನ್ನು ಪ್ರಶ್ನಿಸಿದರು.
ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, “ನಿಮ್ಮ ಜಿಲ್ಲೆಗಳಲ್ಲಿ ಬಾಲ್ಯ ವಿವಾಹ ಆಗುವುದು ನಿಮ್ಮ ಗಮನಕ್ಕೆ ಯಾಕೆ ಬರುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್ಐಆರ್ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ ಇಷ್ಟೊಂದು ಬಾಲ್ಯ ವಿವಾಹಗಳು ನಡೆಯುತ್ತಿರುವುದು ಗಂಭೀರ ವಿಷಯವಲ್ಲವೇ ಎಂದು ಪ್ರಶ್ನಿಸಿದರು.
ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಜನ ವಿರೋಧಿ ದುಷ್ಟ ಶಕ್ತಿಗಳು ಬಾಲಬಿಚ್ಚಲು ಅವಕಾಶ ನೀಡಬಾರದು. ಎಷ್ಟೇ ಪ್ರಭಾವಿಯಾಗಿದ್ದರೂ ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗುವ ಅಧಿಕಾರಿಗಳ ವಿರುದ್ಧ ಸರ್ಕಾರವೇ ಕ್ರಮ ಕೈಗೊಳ್ಳಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರಕಾರಿ ಶಾಲೆಗಳಿಗೆ ಎಲ್ಲ ಸವಲತ್ತುಗಳನ್ನು ನೀಡದರೂ ಎಸೆಸೆಲ್ಸಿ ಮತ್ತು ಪಿಯುಸಿ ಫಲಿತಾಂಶ ಕಳಪೆಯಾಗಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಿಎಂ, ಫಲಿತಾಂಶ ಸುಧಾರಿಸುವುದು ಆಯಾ ಜಿಲ್ಲಾಧಿಕಾರಿ ಮತ್ತು ಸಿಇಒಗಳ ಜವಾಬ್ದಾರಿ ಎಂದು ಹೇಳಿದರು. ಕಳಪೆ ಫಲಿತಾಂಶಕ್ಕೆ ಕಾರಣವೇನು ಎಂಬುದರ ಬಗ್ಗೆ ಆತ್ಮಾವಲೋಕನ ನಡೆಸಬೇಕು ಎಂದು ಸೂಚಿಸಿದರು. ರಾಜ್ಯದಲ್ಲಿ ಸುಮಾರು ಶೇ 74ರಷ್ಟು ಕುಟುಂಬಗಳು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಾರೆ. ಅನರ್ಹರನ್ನು ಗುರುತಿಸಿ, ಬಿಪಿಎಲ್ ಪಟ್ಟಿಯಿಂದ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸಬೇಕು ಎಂದರು.