ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸದಂತೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ್ ಖರ್ಗೆಯವರು ಒತ್ತಾಯಿಸಿದ್ದು, ಇದರ ಬೆನ್ನಲ್ಲೇ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ರಾಜ್ಯದ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್'ಎಸ್ಎಸ್ ಸಂಘಟನೆ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಿದ್ದರಾಮಯ್ಯ ಅವರಿಗೆ ಪ್ರಿಯಾಂಕ್ ಖರ್ಗೆಯವರು ಅ.4ರಂದು ಪತ್ರ ಬರೆದಿದ್ದು, ಈ ವಿಚಾರ ಇದೀಗ ಬೆಳಕಿಗೆ ಬಂದಿದೆ.
ಪತ್ರದಲ್ಲಿ ಸರ್ಕಾರಿ ಶಾಲೆ, ಅನುದಾನಿತ ಶಾಲೆ, ಮೈದಾನ, ಪಾರ್ಕ್, ಮುಜರಾಯಿ ದೇಗುಲ, ಪುರಾತತ್ವ ಇಲಾಖೆ ಸ್ಥಳ ಸೇರಿ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್'ಎಸ್ಎಸ್ ಶಾಖೆ, ಬೈಠಕ್ ಹೆಸರಿನಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಪ್ರಿಯಾಂಕ್ ಖರ್ಗೆಯವರು ಕೋರಿದ್ದಾರೆ. ಈ ಪತ್ರ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರ ಕಣ್ಣು ಕೆಂಪಗಾಗುವಂತೆ ಮಾಡಿದೆ.
ಮುಖ್ಯಮಂತ್ರಿಗಳಿಗೆ ತಾವು ಬರೆದಿರುವ ಪತ್ರದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಿಯಾಂಕ್ ಖರ್ಗೆಯವರು ಪೋಸ್ಟ್ ಮಾಡಿದ್ದು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ. ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.
ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆಂದು ಹೇಳಿದ್ದಾರೆ.
ವಿಶೇಷವೆಂದರೆ ಸಚಿವರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿಗಳಿಗೆ ಪರಿಶೀಲನೆ ನಡೆಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರು, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಮತ್ತೊಂದೆ ಬಿಕೆ.ಹರಿಪ್ರಸಾದ್ ಅವರು ಪ್ರಿಯಾಂಕ್ ಖರ್ಗೆಯವರಿಗೆ ಬೆಂಬಲ ನೀಡಿದ್ದಾರೆ. ಆರ್ಎಸ್ಎಸ್ ಅವರು ಭಾರತ ದೇಶದ ತಾಲಿಬಾನಿಗಳು. ಅವರು ಸರಕಾರದಲ್ಲಿ ನೋಂದಾಯಿಸದ ಸಂಘಟನೆ. ನಾವು ಇಷ್ಟೆಲ್ಲ ಹೇಳುತ್ತಿದ್ದೇವೆ. ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ. ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ನಡೆಸುವ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ. ನೋಂದಣಿ ಇಲ್ಲದೆ ಇಷ್ಟು ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ಚಟುವಟಿಕೆ ನಡೆಸುತ್ತಿದ್ದಾರೆ,
ಪ್ಯಾಲೇಸ್ತೀನ್ ಪರವಾಗಿ ಪ್ರತಿಭಟನೆ ಮಾಡಿದರೆ ಪೊಲೀಸರಿಂದ ತಕ್ಷಣ ಬಂಧನವಾಗುತ್ತದೆ. ಆದರೆ ಆರ್ಎಸ್ಎಸ್ ಶಾಖೆಗಳನ್ನು ಸರ್ಕಾರಿ ಮೈದಾನಗಳಲ್ಲಿ ನಡೆಸಲು ಪೊಲೀಸರು ಅನುಮತಿ ನೀಡುತ್ತಾರೆ. ಇದೇಕೆ ಎಂಬುದನ್ನು ನಾನು ಪ್ರಶ್ನಿಸುತ್ತಿದ್ದೇನೆಂದು ಹೇಳಿದ್ದಾರೆ.
ಇದೇ ವೇಳೆ ಉದಾಹರಣೆಗೆ ತಮಿಳುನಾಡನ್ನು ಉಲ್ಲೇಖಿಸಿದ ಅವರು, ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಲು ಹೋದ ಆರ್ಎಸ್ಎಸ್ ಸದಸ್ಯರ ಮೇಲೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅವರನ್ನು ಬಂಧಿಸಿ ಕೇಸ್ಗಳನ್ನೂ ದಾಖಲಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಕರ್ನಾಟಕದಲ್ಲಿಯೂ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ಮಾಡಬೇಕಾದರೆ ಮೊದಲು ಸರ್ಕಾರದ ಅನುಮತಿ ಪಡೆಯಬೇಕು. ಅನುಮತಿ ಪಡೆದು ಮಾಡಿದರೆ ನಮಗೂ ಯಾವುದೇ ಅಭ್ಯಂತರ ಇಲ್ಲ. ಆದರೆ ಆರ್ಎಸ್ಎಸ್ ಶಾಖೆಗಳು ಹಲವು ವರ್ಷಗಳಿಂದ ಯಾವುದೇ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿವೆ. ಲಾಠಿ ಮತ್ತು ತಲ್ವಾರ್ ಹಿಡಿದು ಸರ್ಕಾರಿ ಜಾಗಗಳಲ್ಲಿ ಶಾಖೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.