ರಾಯಚೂರು: ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಗೂ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸರ್ಕಾರಿ ನೌಕರರ ವಿರುದ್ಧದ ಸರ್ಕಾರದ ಕ್ರಮದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಗಣವೇಷಧಾರಿಯಾಗಿ 'ಆರ್ ಎಸ್ ಎಸ್' ಪಥ ಸಂಚಲನದಲ್ಲಿ ಭಾಗಿಯಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.
ಇದೇ ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್ಎಸ್ಎಸ್ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.
ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.