ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ 'ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ' ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75) ಅವರು ಮನೆಗೆ ಹೊರಟಿದ್ದ ವೇಳೆ ಹಿಂದಿನಿಂದ ಬಂದ ಹೋರಿ ಹಾಯ್ದು ಸಾವನ್ನಪ್ಪಿದ್ದಾರೆ. ಬರೋಡಾ ಬ್ಯಾಂಕ್ ಎದುರುಗಡೆ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಕುರಿತು ಹಾವೇರಿ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರರು.
ದೇವಿಹೊಸೂರು ಗ್ರಾಮದ ಘನಿಸಾಬ್ (75) ಎಂಬವರು ದನ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು ಸಾವನ್ನಪ್ಪಿದ್ದಾರೆ. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಹೋರಿ ಮನೆಗೆ ನುಗ್ಗಿದೆ. ಮನೆ ಕಟ್ಟೆ ಮೇಲೆ ಕುಳಿತಿದ್ದ ಘನಿಸಾಬಗೆ ಹೋರಿ ತಿವಿದಿದೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾನಗಲ್ ತಾಲೂಕಿನ ತಿಳವಳ್ಳಿಯಲ್ಲಿ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾನೆ. ಸಂಜೆ ತಿಳವಳ್ಳಿ ಸಮೀಪದ ದುರ್ಗಾಂಬಿಕಾ ದಾಬಾ ಬಳಿ ಘಟನೆ ನಡೆದಿದೆ. ಗಾಯಾಳು ಭರತ್ ರಾಮಪ್ಪ ಹಿಂಗಮೇರಿ (24) ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಲಿಲ್ಲ ಎಂಜು ತಿಳಿದು ಬಂದಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಪ್ರತಿವರ್ಷ ದೀಪಾವಳಿಯಂದು ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಜಾತ್ರಾ ಸಮಿತಿ ಬಲಿಪಾಡ್ಯಮಿ ದಿನ ದನ ಬೆದರಿಸುವ ಸ್ಪರ್ಧೆ ಆಯೋಜಿಸುತ್ತದೆ. ಸ್ಪರ್ಧೆಯಲ್ಲಿ ಯಾವುದೇ ಬಹುಮಾನ ಇರುವುದಿಲ್ಲ.
ಸ್ಪರ್ಧೆ ನಡೆದ ನಂತರ ಬೇರೆ ಕಡೆ ಸ್ಪರ್ಧೆಗಳಲ್ಲಿ ಹೋರಿಗಳಿಗೆ ಬಹುಮಾನ ನೀಡಲಾಗುತ್ತದೆ. ಈ ವರ್ಷದ ಸ್ಪರ್ಧೆ ಬುಧವಾರ ಮಧ್ಯಾಹ್ನ ನಡೆಯಿತು. ಹಾವೇರಿ ನಗರ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಂದ ರೈತರು ತಮ್ಮ ನೆಚ್ಚಿನ ಹೋರಿಗಳನ್ನು ಸ್ಪರ್ಧೆಗೆ ಕರೆತಂದಿದ್ದರು. ಸುಮಾರು 300ಕ್ಕೂ ಅಧಿಕ ಕೊಬ್ಬರಿ ಹೋರಿಗಳು ಭಾಗಿಯಾಗಿದ್ದವು.