ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದ್ದು, 3.65 ಲಕ್ಷ ಅನರ್ಹ BPL ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದ್ದು, ಇನ್ನೂ ಸಾಕಷ್ಟು ಜನ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದು, ಅವುಗಳನ್ನು ರದ್ದುಪಡಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಸೂಚನೆ ನೀಡಿದ್ದಾರೆ.
ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.
ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಲಿ ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ.
ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.