ಬೆಂಗಳೂರು: ಎಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ ದಿಢೀರನೇ ವ್ಯಾಪಿಸಿ ಇಡೀ ಬಿಎಂಟಿಸಿ ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ಮುಖ್ಯ ಗೇಟ್ ಬಳಿ ಸೊಮವಾರ ಮುಂಜಾನೆ ಸಂಭವಿಸಿದೆ.
ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ನ ಎಂಜಿನ್ನಲ್ಲಿ ಬೆಳಗ್ಗೆ 5.15ಕ್ಕೆ ಬೆಂಕಿ ಕಾಣಿಸಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.
ಕೂಡಲೇ ಬೆಂಕಿ ಇಡೀ ಬಸ್ ವ್ಯಾಪಿಸಿದ್ದು, ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಎಎಲ್ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಎಂಟಿಸಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಪತ್ತೆ ಹಚ್ಚಲು ಮುಂದಾಗಿದೆ.