ಬೆಂಗಳೂರು: ಐಪಿಎಲ್ ಪಂದ್ಯಾವಳಿಯ ವೇಳೆ ಮೊಬೈಲ್ ಕಳ್ಳತನ ಮಾಡಿದ ಆರೋಪದಲ್ಲಿ ನಾಲ್ವರು ಅಪ್ರಾಪ್ತರು ಸೇರಿದಂತೆ ಐವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ತಂಡಗಳ ನಡುವಿನ ಪಂದ್ಯವನ್ನು ವೀಕ್ಷಿಸಲು ಬಂದಿದ್ದ ಅಭಿಮಾನಿಗಳಿಂದ ಮೊಬೈಲ್ ಕಳ್ಳತನ ಮಾಡಲಾಗಿತ್ತು.
ಬಂಧಿತನನ್ನು ಜಾರ್ಖಂಡ್ ರಾಜ್ಯದ ಸಾಹಿಬ್ಗಂಜ್ ಮೂಲದ ಶುಭಮ್ ಕುಮಾರ್ (26) ಎಂದು ಗುರುತಿಸಲಾಗಿದೆ. ಅವನ ಜೊತೆಗೆ ನಾಲ್ವರು ಅಪ್ರಾಪ್ತರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು ಟಿಕೆಟ್ ಪಡೆದು ಜರ್ಸಿ ಧರಿಸಿ ಚಿನ್ನಸ್ವಾಮಿ ಸ್ಟೇಡಿಯಂ ಒಳಗೆ ಪ್ರವೇಶಿಸಿ, ಪಿ3 ಸ್ಟ್ಯಾಂಡ್ ಬಳಿ ಮೊಬೈಲ್ಗಳನ್ನು ಕಳ್ಳತನ ಮಾಡಿದ್ದರು. ಮಾತ್ರವಲ್ಲದೆ, ಎಂ.ಜಿ. ರಸ್ತೆ ಹಾಗೂ ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲೂ ಕಳ್ಳತನ ನಡೆಸಿದ್ದಾರೆ.
ಪಂದ್ಯದ ನಂತರ ಒಟ್ಟು 29 ಮೊಬೈಲ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಒಬ್ಬ ಸಂತ್ರಸ್ತ ವ್ಯಕ್ತಿಯ ಪತ್ನಿ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡ ನಂತರ ಹಲವುಪ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಇತರ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು ರೂ.18 ಲಕ್ಷ ಮೌಲ್ಯದ 21 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಸಂಘಟಿತ ಅಪರಾಧ ಜಾಲದ ಭಾಗವಾಗಿರಬಹುದೆಂಬ ಅನುಮಾನವಿದೆ. ಅಪ್ರಾಪ್ತರನ್ನು ಬಳಸಿಕೊಂಡು ಐಪಿಎಲ್ ಪಂದ್ಯಗಳ ವೇಳೆ ಇಂತಹ ಕಳ್ಳತನ ನಡೆಸಿರುವ ಅನುಮಾನಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 5ರಂದು ನಡೆಯಲಿರುವ ಪಂದ್ಯಕ್ಕೂ ಈ ತಂಡ ಕಳ್ಳತನ ನಡೆಸುವ ಯೋಜನೆ ರೂಪಿಸಿತ್ತು ಎಂದು ಶಂಕಿಸಲಾಗಿದ್ದು, ಇದೀಗ ಇತರೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.