ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುರುವಾರ ಗುಡ್ಡ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಕಾರ್ಮಿಕರನ್ನು ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹುಲಿಕಲ್ ಘಾಟ್ನಲ್ಲಿ ವಾಹನ ಸವಾರರ ಸುರಕ್ಷತೆಗಾಗಿ ತಡೆಗೋಡೆ ನಿರ್ಮಾಣ ಕೆಲಸ ನಡೆಯುತ್ತಿತ್ತು. ಗುತ್ತಿಗೆದಾರ ಚಂದ್ರಶೇಖರ್ ಎಂಬುವವರ ನೇತೃತ್ವದಲ್ಲಿ ಈ ಕಾಮಗಾರಿ ಪ್ರಗತಿಯಲ್ಲಿತ್ತು.
ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಮೇಲ್ಭಾಗದಿಂದ ಭಾರೀ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ದಿಢೀರನೆ ಕುಸಿದಿವೆ. ಈ ವೇಳೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ತಪ್ಪಿಸಿಕೊಳ್ಳಲು ಸಮಯ ಸಿಗದೆ ಮಣ್ಣಿನ ಅಡಿಯಲ್ಲಿ ಹೂತು ಹೋಗಿದ್ದಾರೆ. ಗುಡ್ಡ ಕುಸಿತದ ತೀವ್ರತೆಗೆ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.