ಧಾರವಾಡ: ಧಾರವಾಡ ನಗರದಲ್ಲಿ 32 ವರ್ಷದ ಯುವ ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ಏಪ್ರಿಲ್ 10 ರಂದು ಮಾಲಾಪುರ ಪ್ರದೇಶದಲ್ಲಿರುವ ಫೈರೋಜ್ ಪಠಾಣ್ ಅವರ ಮನೆ ನುಗ್ಗಿ, ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದರು, ಈ ಭೀಕರ ಕೊಲೆ ನಿವಾಸಿಗಳಲ್ಲಿ ಭೀತಿ ಸೃಷ್ಟಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪಠಾಣ್ ಅವರು ರಾತ್ರಿ 9.30 ರಿಂದ ರಾತ್ರಿ 10 ಗಂಟೆಯ ನಡುವೆ ಮನೆಯಲ್ಲಿದ್ದಾಗ ಸುಮಾರು ಮೂರರಿಂದ ನಾಲ್ಕು ಜನ ಬಂದು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ದಾಳಿಯಿಂದಾಗಿ, ಅವರಿಗೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯ ನಂತರ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.
"ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಂಬತ್ತು ಜನರನ್ನು ಬಂಧಿಸಿದ್ದೇವೆ. ಒಂಬತ್ತು ಆರೋಪಿಗಳನ್ನು ನಿನ್ನೆ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಹೆಚ್ಚಿನ ತನಿಖೆಗಾಗಿ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
"ಇನ್ನೂ ಕೆಲವು ಆರೋಪಿಗಳನ್ನು ಬಂಧಿಸಬೇಕಾಗಿದೆ. ಈ ಪ್ರಕರಣದಲ್ಲಿ, ಪ್ರತ್ಯಕ್ಷದರ್ಶಿಗಳಿದ್ದಾರೆ ಮತ್ತು ಅವರ ಹೆಚ್ಚುವರಿ ಹಾಗೂ ವಿವರವಾದ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ" ಎಂದು ಅವರು ಹೇಳಿದ್ದಾರೆ.
ಅಪರಾಧ ಮಾಡಿದ ನಂತರ, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಇಡೀ ಕೃತ್ಯವನ್ನು ಹತ್ತಿರದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲಾಗಿದ್ದು, ತನಿಖೆಗೆ ನಿರ್ಣಾಯಕ ಸುಳಿವುಗಳನ್ನು ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಗೆ ಕಾರಣವೇನು?
ಕೊಲೆಯಾದ ಪಠಾಣ್ ಮತ್ತು ಪ್ರಮುಖ ಆರೋಪಿ ವೈಯಕ್ತಿಕ ವಿವಾದವನ್ನು ಹೊಂದಿದ್ದರು. ಆರೋಪಿಗಳ ವಿಚಾರಣೆ ವೇಳೆ, ತಮ್ಮ ನಡುವೆ ಆಗಾಗ್ಗೆ ಘರ್ಷಣೆಗಳು ನಡೆಯುತ್ತಿದ್ದವು ಎಂದು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮತ್ತು ಕೊಲೆಯಾದ ವ್ಯಕ್ತಿ ನಡುವೆ ವೈಯಕ್ತಿಕ ದ್ವೇಷ ಇತ್ತು. ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಮೃತರಿಗೆ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
"ಆದ್ದರಿಂದ ಕೊಲೆಗೆ ಮುಖ್ಯ ಕಾರಣ ಅವರ ನಡುವಿನ ನಿರಂತರ ವೈಯಕ್ತಿಕ ಸಂಘರ್ಷ ಎಂದು ತೋರುತ್ತದೆ. ಪ್ರಕರಣದಲ್ಲಿ ಭಾಗಿಯಾಗಿರುವ ಕೆಲವು ಆರೋಪಿಗಳು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದ್ದಾರೆ. ಅವರು ಪರಸ್ಪರ ಸಂಪರ್ಕದಲ್ಲಿದ್ದರು ಮತ್ತು ಹಲವಾರು ದಿನಗಳ ಮುಂಚಿತವಾಗಿ ಕೊಲೆಗೆ ಸಂಚು ರೂಪಿಸಿದ್ದರು" ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.