ಬೆಂಗಳೂರು: ರಾಮನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಲ್ಯಾಪರೋಸ್ಕೋಪಿಕ್ ಟ್ಯೂಬೆಕ್ಟಮಿ ಶಸ್ತ್ರಚಿಕಿತ್ಸೆ ನಂತರ ಮೃತಪಟ್ಟ 21 ವರ್ಷದ ಮಹಿಳೆಯ ಸಾವಿನ ಪ್ರಕರಣದಲ್ಲಿ ವೈದ್ಯರ ವಿರುದ್ಧ ನಿರ್ಲಕ್ಷ್ಯತನ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ಶಸ್ತ್ರಚಿಕಿತ್ಸೆಯ ನಂತರ ಉಂಟಾದ ಗಂಭೀರ ಸಮಸ್ಯೆಗಳ ಪರಿಣಾಮವಾಗಿ ಮೃತಪಟ್ಟಿದ್ದಾರೆ. ಈ ಪ್ರಕರಣದಲ್ಲಿ, ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಆಕೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಮೊದಲಿಗೆ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಲಾಗಿತ್ತು.
ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನೀಡಿದ ವರದಿಯ ಆಧಾರದ ಮೇಲೆ, ಈ ಸಾವು ವೈದ್ಯಕೀಯ ನಿರ್ಲಕ್ಷ್ಯದಿಂದ ಸಂಭವಿಸಿರಬಹುದು ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.
ವೈದ್ಯ ಡಾ ಎಂ ವಿ ರಾಮಕೃಷ್ಣಯ್ಯ ವಿರುದ್ಧ FIR ದಾಖಲಾಗಿದ್ದು, ಅವರು ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೈಯದ್ ತನ್ವೀರ್ ಹುಸೇನ್ ಎಂಬ ಪೊಲೀಸ್ ಉಪನಿರೀಕ್ಷಕರು ಈ ದೂರು ದಾಖಲಿಸಿದ್ದಾರೆ.
ಮೃತ ಮಹಿಳೆ ಮಾಧುರಿ ಅವರು ಕಳೆದ ವರ್ಷ ಮಾರ್ಚ್ 26ರಂದು ಬೆಳಗ್ಗೆ 10:32ಕ್ಕೆ ಮೃತಪಟ್ಟಿದ್ದಾರೆ. ಅವರ ಪತಿ ಕೆ ಅನಿಲ್ ಕುಮಾರ್ ವೈದ್ಯಕೀಯ ನಿರ್ಲಕ್ಷ್ಯ ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದರು.
ಮರಣೋತ್ತರ ಪರೀಕ್ಷೆ ವರದಿ ನಂತರ ದೇಹದ ಒಳಗಿನ ಮುಖ್ಯ ಅಂಗಾಂಗಗಳ ಮಾದರಿಯನ್ನು ಫೊರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿಗೆ ಕಳುಹಿಸಲಾಗಿತ್ತು. ನಂತರ ವರದಿಯನ್ನು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ಕಳುಹಿಸಲಾಗಿದ್ದು, ಅಂತಿಮ ವರದಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ನಿರ್ಲಕ್ಷ್ಯ ಸಾಧ್ಯತೆಯನ್ನು ನಿರಾಕರಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.
ಈ ಅಂತಿಮ ವರದಿಯ ಆಧಾರದ ಮೇಲೆ ವೈದ್ಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಪ್ರಕರಣ ಇನ್ನೂ ತನಿಖೆಯಲ್ಲಿದೆ. ಇದುವರೆಗೆ ವೈದ್ಯರನ್ನು ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ ವಿಭಾಗ 106(1) ಅಡಿಯಲ್ಲಿ ದಾಖಲಿಸಲಾಗಿದೆ.