ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲ್ಪಟ್ಟ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರಿಸುವಾಗ ಹೈಡ್ರಾಮಾ ನಡೆದಿದೆ,
ವಿಜಯ್ ಕುಲಕರ್ಣಿಯವರನ್ನು ಕರೆದೊಯ್ಯುತ್ತಿದ್ದ ಬಸ್ನಲ್ಲಿ ತಾಂತ್ರಿಕ ದೋಷ ಉಂಟಾಗಿ, ದಟ್ಟ ಹೊಗೆ ಆವರಿಸಿದ ಘಟನೆ ಬುಧವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸಮೀಪದಲ್ಲಿ ಸಂಭವಿಸಿದೆ.
2016ರಲ್ಲಿ ನಡೆದ ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಬುಧವಾರ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿತ್ತು.
ಕ್ರಿಮಿನಲ್ ಸಂಚು ಮತ್ತು ಹತ್ಯೆ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ನ್ಯಾಯಾಲಯವು ಸಿಬಿಐಗೆ ನಿರ್ದೇಶನ ನೀಡಿತ್ತು.
ತೀರ್ಪಿನ ನಂತರ, ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದೆ.
ಬಸ್ನಲ್ಲಿ ಅಕಸ್ಮಿಕವಾಗಿ ತಾಂತ್ರಿಕ ದೋಷ ಉಂಟಾಗಿ, ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಬಸ್ನೊಳಗಿದ್ದ ಆರೋಪಿಗಳು ಹಾಗೂ ಸಿಬಿಐ ಭದ್ರತಾ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ ತಕ್ಷಣವೇ ಎಚ್ಚೆತ್ತುಕೊಂಡ ಸಿಬಿಐ ತಂಡ ಪರಿಸ್ಥಿತಿಯನ್ನು ನಿಯಂತ್ರಿಸಿ, ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಬಂದಿತು. ನಂತರ ಆರೋಪಿಗಳನ್ನು ಬೇರೆ ವಾಹನಗಳ ಮೂಲಕ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಡೀಸೆಲ್ ಲೀಕ್ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸ್ ಮೂಲಗಳ ಪ್ರಕಾರ, ಸಿಬಿಐ ಎಸ್ಕೋರ್ಟ್ ತಂಡದ ತ್ವರಿತ ಕಾರ್ಯಾಚರಣೆ ಮತ್ತು ಎಚ್ಚರಿಕೆಯೇ ಸಂಭವಿಸಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದೆ ಎಂದು ತಿಳಿದುಬಂದಿದೆ. ಇನ್ನು ಈ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಗುರುವಾರ ಪ್ರಕಟಿಸುವ ನಿರೀಕ್ಷೆಯಿದೆ.