ಬೆಂಗಳೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರದ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಆರು ಮಂದಿ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.
ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ ತಮ್ಮವರನ್ನು ಕೂಡಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ಕೆ.ಆರ್.ನಗರದ (KR Nagar) ಪ್ರಸಿದ್ಧ ಅರ್ಕೇಶ್ವರ ದೇವಸ್ಥಾನದ ಸಮೀಪದ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಮಂದಿ ಭಾನುವಾರ ಮೃತಪಟ್ಟಿದ್ದರು.
ದರ್ಗಾಕ್ಕೆ ಭೇಟಿ ನೀಡಲು ಹೋಗಿದ್ದ ಪ್ರವಾಸಿಗರು, ಅರ್ಕೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದಾಗ ಪ್ರವಾಸಿಗರು ಮೃತಪಟ್ಟಿದ್ದರು. ಮೃತರೆಲ್ಲರೂ ಒಂದೇ ಕುಟುಂಬದವರೆಂದು ತಿಳಿದುಬಂದಿದೆ.
ಮೃತರನ್ನು ಯಾಸೀನ್ (23), ಫಾತಿಮ್ (30), ನೇಹಾನ್ (19), ಆಲೀಂ (13), ಹುಮಾಯೂನ್ (7) ಎಂದು ಗುರ್ತಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಕೆ.ಆರ್. ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿದ್ದಾರೆ. ಸ್ಥಳೀಯ ಈಜುಗಾರರ ನೆರವಿನೊಂದಿಗೆ ನದಿಯಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಲಾಗಿದೆ.