ಶಿವಮೊಗ್ಗ: ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಕೇಂದ್ರವು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಕಳುಹಿಸಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.
ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಇತ್ತೀಚೆಗೆ ಸುದ್ದಿಗಳು ಹರಿದಾಡುತ್ತಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ಕೇಂದ್ರ ಸರ್ಕಾರದ ಅಧೀನದ ಎನ್.ಟಿ.ಪಿ.ಸಿ ಸಂಸ್ಥೆ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಗುರುತಿಸಿದೆ. ಸೂಕ್ತ ಸ್ಥಳಗಳ ಆಯ್ಕೆಗಾಗಿ ಪ್ರಾಥಮಿಕ ಅಧ್ಯಯನ ಮತ್ತು ಭೂ-ವೈಜ್ಞಾನಿಕ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಈ ವಿಷಯ ಗೊತ್ತಾದ ತಕ್ಷಣ ಜಿಲ್ಲಾಧಿಕಾರಿ ಜತೆ ಚರ್ಚೆ ನಡೆಸಿದಾಗ, ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕೃತ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ ಎಂದಿದ್ದಾರೆ.
ಶರಾವತಿ ಸಂತ್ರಸ್ತರಿಗೆ ಇಂದಿಗೂ ಸಮರ್ಪಕ ಭೂಪರಿಹಾರ ಒದಗಿಸಲಾಗಿಲ್ಲ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಸರ ಆಸಕ್ತರು ಮತ್ತು ಬುದ್ಧಿಜೀವಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಪರಿಸರ ಹಾನಿ ಉಂಟಾಗುವ ಯಾವುದೇ ಯೋಜನೆಗೂ ತಮ್ಮ ಸ್ಪಷ್ಟ ವಿರೋಧವಿದ್ದು, ಜನರ ಹಿತಾಸಕ್ತಿ ಕಾಪಾಡಲು ಬದ್ಧರಾಗಿರುವುದಾಗಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಅಧೀನದ ಎನ್ಟಿಪಿಸಿ (ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್) ಸಂಸ್ಥೆಯಿಂದ ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಸೂಕ್ತ ಸ್ಥಳಗಳ ಆಯ್ಕೆಗಾಗಿ ಪ್ರಾಥಮಿಕ ಅಧ್ಯಯನಗಳು ಹಾಗೂ ಭೂ-ವೈಜ್ಞಾನಿಕ ಪರಿಶೀಲನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ.