ಬೆಂಗಳೂರು: ಮಾಗಡಿ ಉಪವಿಭಾಗದ ಕುದೂರು ಪೊಲೀಸ್ ವ್ಯಾಪ್ತಿಯ ಬಸವಣ್ಣ ದೇವಸ್ಥಾನದ ಬಳಿಯ ಬನವಾಡಿ ಕೆರೆಯಲ್ಲಿ ಮೂರು ತಿಂಗಳ ಮಗುವಿನ ಶವವೊಂದು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸೋಮವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಬಸವಣ್ಣ ದೇವಸ್ಥಾನದ ಸಮೀಪದ ಕೆರೆಯಲ್ಲಿ ಮಗುವಿನ ಶವ ತೇಲುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಸದಸ್ಯ ವಿ. ಸುಬ್ಬಣ್ಣ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಗು ಎರಡು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ನಂತರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಘಟನೆಯ ಕುರಿತು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಗುವಿನೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ, ಅಥವಾ ಮಗು ಮೃತಪಟ್ಟ ನಂತರ ಶವವನ್ನು ಕೆರೆಗೆ ಎಸೆದಿರಬಹುದೆಂಬ ಶಂಕೆಗಳು ವ್ಯಕ್ತವಾಗಿವೆ. ಮಗು ಜೀವಂತವಾಗಿಯೇ ಕೆರೆಗೆ ಎಸೆಯಲ್ಪಟ್ಟಿರಬಹುದೇ ಎಂಬ ಅಂಶವನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಈ ಸಂಬಂಧ ಅಪರಿಚಿತ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 94 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.