ಧಾರವಾಡ: BSc ವಿದ್ಯಾರ್ಥಿಯೊಬ್ಬ ಪೊಲೀಸರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ವಿದ್ಯಾಗಿರಿ ಠಾಣೆ ಇನ್ಸ್ ಪೆಕ್ಟರ್ ನನ್ನು ಅಮಾನತುಗೊಳಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು, ಪೊಲೀಸ್ ಇನ್ಸ್ ಪೆಕ್ಟರ್ ರಫೀಕ್ ತಹಶಿಲ್ದಾರ್ ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಗಾಂಜಾ ಪ್ರಕರಣದಲ್ಲಿ ಧಾರವಾಡದ ಕಿಟೆಲ್ ಕಾಲೇಜು ವಿದ್ಯಾರ್ಥಿ ಆದಿತ್ಯ ಮ್ಯಾಗೇರಿಯನ್ನು ಪೊಲಿಸರು ವಶಕ್ಕೆ ಪಡೆದಿದ್ದು ನಂತರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಪೊಲೀಸರ ಕಿರುಕುಳದಿಂದ ಮನನೊಂದಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು. ಪ್ರಕರಣ ಸಂಬಂಧ ನಿನ್ನೆ ವಿದ್ಯಾಗಿರಿ ಠಾಣೆಯ ಮೂವರು ಕಾನ್ಸ್ ಟೇಲ್ ಗಳನ್ನು ಅಮಾನತು ಮಾಡಲಾಗಿತ್ತು.
ಗಾಂಜಾ ಪ್ರಕರಣದಲ್ಲಿ ಇತ್ತೀಚೆಗೆ ಪೊಲೀಸರು ಹತ್ತು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದಿತ್ಯನ ವೈದ್ಯಕೀಯ ತಪಾಸಣೆ ವರದಿಯಲ್ಲೂ ನೆಗೆಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಿಟ್ಟು ಕಳುಹಿಸಿದ್ದರು. ನಂತರ ಸುಳ್ಳು ಕೇಸ್ ಹಾಕಿ ತನ್ನನ್ನು ವಶಕ್ಕೆ ಪಡೆದಿದ್ದರು. ಇದರಿಂದಾಗಿ ಆದಿತ್ಯ ಆತ್ಮಹತ್ಯೆಗೆ ಶರಣಾಗಿದ್ದನು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.