ಬಹುನಿರೀಕ್ಷಿತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ, ನಿರಾಶೆಗೊಂಡಿರುವ ಕಾಂಗ್ರೆಸ್ ಶಾಸಕರು ಸಂಯಮದಿಂದ ಇರುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಮನವಿ ಮಾಡಿದರು. ತಾವೂ ಕೂಡ ಒಮ್ಮೆ ಸಚಿವರಾಗುವ ಅವಕಾಶವನ್ನು ಕಳೆದುಕೊಂಡಿದ್ದೆ, ನಂತರ ಆ ಅವಕಾಶ ಪಡೆದೆ ಎಂದಿದ್ದಾರೆ.
'ನಮ್ಮಲ್ಲಿ ಅನೇಕ ಶಾಸಕರಿದ್ದಾರೆ, ಎಲ್ಲರಿಗೂ ಅವಕಾಶ ಕಲ್ಪಿಸುವುದು ಸಾಧ್ಯವಿಲ್ಲ. ಹಿಂದೆ ಸಿದ್ದರಾಮಯ್ಯನವರ ಸಂಪುಟದಲ್ಲಿ ನನಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದರೆ ನಂತರ ನಾನು ಸಚಿವನಾಗಲಿಲ್ಲವೇ? ಅದೇ ರೀತಿ, ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ನೀಡುತ್ತೇವೆ' ಎಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿರುವ ಲೋಕ ಭವನಕ್ಕೆ ತೆರಳುವ ಮುನ್ನ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಹಲವು ಹಿರಿಯ ನಾಯಕರಿಗೆ ಸ್ಥಾನ ಸಿಗದಿದ್ದರಿಂದ ಕಾಂಗ್ರೆಸ್ನಲ್ಲಿ ಅಸಮಾಧಾನ ಹೆಚ್ಚುತ್ತಿರುವ ನಡುವೆಯೇ ಅವರ ಈ ಹೇಳಿಕೆ ಹೊರಬಿದ್ದಿದೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು, ಕೊನೇ ಗಳಿಗೆಯಲ್ಲಿ ಸಚಿವ ಸ್ಥಾನಕ್ಕೆ ಕೈ ತಪ್ಪಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಾಟೀಲ್ ಅವರು ವಿಧಾನಸೌಧದಲ್ಲಿ ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ತಕ್ಷಣವೇ ಅವರ ಬೆಂಬಲಿಗರು ಘೋಷಣೆಗಳನ್ನು ಕೂಗುತ್ತಾ ಹಾಗೂ ಪಕ್ಷದ ನಾಯಕತ್ವವು ಅವರೊಂದಿಗೆ ಅನ್ಯಾಯವಾಗಿ ವರ್ತಿಸಿದೆ ಎಂದು ಆರೋಪಿಸುತ್ತಾ ಪ್ರತಿಭಟನೆ ನಡೆಸಿದರು.