ಬೆಂಗಳೂರು: ಪ್ರಸಿದ್ಧ ಪ್ರವಾಸಿ ತಾಣವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ನಾಪತ್ತೆಯಾಗಿರುವ ಟೆಕ್ಕಿಯನ್ನು ಬೆಂಗಳೂರಿನ 31 ವರ್ಷದ ಅದ್ವೈತ್ ಉಪಾಧ್ಯಾಯ ಎಂದು ಗುರುತಿಸಲಾಗಿದ್ದು, ನಿನ್ನೆ ಬೆಳಗ್ಗೆಯಿಂದ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುವುದರಿಂದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಶುಕ್ರವಾರ ಬೆಳಗ್ಗೆ ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ಬಂದಿದ್ದ ಅದ್ವೈತ್, ಬೆಟ್ಟದ ಪಾರ್ಕಿಂಗ್ನಲ್ಲಿ ಬುಲೆಟ್ ಬೈಕ್ ಪಾರ್ಕ್ ಮಾಡಿ ಬೆಟ್ಟ ಏರಿದ ನಂತರ ನಾಪತ್ತೆಯಾಗಿದ್ದಾರೆ.
ಈ ಸಂಬಂಧ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್ನಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರೋನ್ ಕ್ಯಾಮೆರಾ ಬಿಟ್ಟು ಪರಿಶೀಲನೆ ನಡೆಸಲಾಗುತ್ತಿದೆ.
ಶಿವಗಂಗೆ ಬೆಟ್ಟ ಸಮುದ್ರದ ಮಟ್ಟದಿಂದ 4,800 ಅಡಿ ಎತ್ತರದಲ್ಲಿದೆ. ಅಪಾಯಕಾರಿ ರೀತಿಯಲ್ಲಿ ಶಾಂತಲಾ ಡ್ರಾಪ್ ಇದೆ. ಮರಗಿಡಗಳು ಕಲ್ಲು ಬಂಡೆಗಳಿಂದ ಕೂಡಿದೆ.