ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸಲು ನ್ಯಾಯಾಲಯ ಸೋಮವಾರ ಒಪ್ಪಿಗೆ ಸೂಚಿಸಿದೆ.
ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು, ಪ್ರಕರಣ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ದೊಡ್ಡ ತಿರುವು ಪಡೆದುಕೊಂಡಿದೆ. ಹೀಗಾಗಿ ಜೈಲಿನಲ್ಲಿರುವ ನಟ ದರ್ಶನ್, ಹಾಗೂ ಪವಿತ್ರಾ ಗೌಡ ಅವರಿಗೆ ಭಾರೀ ಟೆನ್ಶನ್ ಶುರುವಾಗಿದೆ.
ಪ್ರದೋಷ್ ನ್ಯಾಯಾಲಯಕ್ಕೆ ಸಲ್ಲಿಸಿರುವ 11 ಪುಟಗಳ ಕ್ಷಮಾದಾನ ಅರ್ಜಿ(ಮಾಫಿ ಸಾಕ್ಷಿ)ಯಲ್ಲಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಜಯನಗರದ ಮೈದಾನದಲ್ಲಿ ದರ್ಶನ್ ಪರಿಚಯವಾದ ದಿನದಿಂದ ಹಿಡಿದು ಜೈಲು ಪಾಲಾಗುವವರೆಗಿನ ಇಡೀ ಘಟನಾವಳಿಯನ್ನು ಎಳೆಎಳೆಯಾಗಿ ಸಿಸಿಎಚ್-59 ನ್ಯಾಯಾಧೀಶರ ಮುಂದೆ ಪ್ರದೋಷ್ ಬಿಚ್ಚಿಟ್ಟಿದ್ದಾನೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರದೋಷ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು 59ನೇ ಸಿಸಿಹೆಚ್ ನ್ಯಾಯಾಲಯ ಸಮ್ಮತಿ ನೀಡಿದೆ.
ಈ ಹಿಂದೆ ಪ್ರದೋಷ್ ಮಾಫಿ ಸಾಕ್ಷಿಯಾಗಲು ಪ್ರಾಸಿಕ್ಯೂಷನ್ ಒಪ್ಪಿಗೆ ನೀಡಿತ್ತು. ಆದರೆ ದರ್ಶನ್ ಪರ ವಕೀಲರು ಇದನ್ನು ವಿರೋಧಿಸಿದ್ದರು. ಇದೀಗ ನ್ಯಾಯಾಲಯವೇ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಪುರಸ್ಕರಿಸಿದೆ.