ಮಂಗಳೂರಿನ ಸಮೀಪದ ಪೆರ್ಮುದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಣಾವ ಎಂಬಲ್ಲಿ ಮನೆಯ ಅಂಗಳದ ಬದಿ ಶೆಡ್ಡಿಗೆ ನುಗ್ಗಿ ಸಾಕು ನಾಯಿ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಸ್ಥಳೀಯರಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ.
ಮೊನ್ನೆಭಾನುವಾರ ತಡರಾತ್ರಿ ಚಿರತೆ ಮನೆಯ ಅಂಗಳಕ್ಕೆ ನುಗ್ಗಿ ಸಾಕು ನಾಯಿಯ ಮೇಲೆ ದಾಳಿ ನಡೆಸಿದೆ. ಚಿರತೆ ನಾಯಿಯನ್ನು ಹೊತ್ತೊಯ್ದಿದೆ ಎಂದು ತಿಳಿದುಬಂದಿದೆ.ಅಂಗಳಕ್ಕೆ ಏಕಾಏಕಿ ನುಗ್ಗಿದ ಚಿರತೆ ಮನೆಯ ಸಮೀಪ ಮಲಗಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಬಳಿಕ ಅದನ್ನು ಬಾಯಿಯಲ್ಲಿ ಕಚ್ಚಿಕೊಂಡು ತೆರಳುತ್ತಿರುವ ದೃಶ್ಯ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚಿರತೆ ಕಾಣಿಸಿಕೊಂಡು ಸಾಕು ನಾಯಿಯ ಮೇಲೆ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಬಜ್ಪೆ–ಪೆರ್ಮುದೆ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಚಿರತೆ ಸೆರೆಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ರಾತ್ರಿ ವೇಳೆ ಒಂಟಿಯಾಗಿ ಮನೆಯಿಂದ ಹೊರಗೆ ಹೋಗದಂತೆ ಹಾಗೂ ಸಾಕುಪ್ರಾಣಿಗಳನ್ನು ಸುರಕ್ಷಿತವಾಗಿ ಮನೆಯೊಳಗೆ ಇರಿಸುವಂತೆ ನಿವಾಸಿಗಳಿಗೆ ಸೂಚಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರದೇಶದ ಮೇಲೆ ನಿಗಾ ವಹಿಸುತ್ತಿದ್ದಾರೆ.
ಈ ಭಾಗದಲ್ಲಿ ಚಿರತೆ ಸಂಚಾರ ಇದೆ ಎಂಬ ಸುದ್ದಿಗಳ ನಡುವೆಯೇ ರಾತ್ರಿ ವೇಳೆ ನಡೆದ ಈ ಘಟನೆ ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಮೂಡಿಸಿದೆ. ಇದೇ ವೇಳೆ ಈ ಪರಿಸರದಲ್ಲಿ ಮತ್ತಷ್ಟು ಚಿರತೆಗಳ ಸಂಚಾರವಿದೆ ಎಂಬ ಅನು ಮಾನವೂ ಕಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು , ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.