ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ.
ಮಂಗಳವಾರ ಸಿಸಿಬಿ ಅಧಿಕಾರಿಗಳು ನಡೆಸಿದ ದಿಢೀರ್ ಪರಿಶೀಲನೆ ವೇಳೆ ಈ ವಿಚಾರ ಬೆಳಕಿಗೆ ಬಂದಿದ್ದು, ಜೈಲಿನಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಮತ್ತೆ ಪುಷ್ಟಿ ನೀಡಿದೆ.
ಅತ್ಯಾಚಾರ ಪ್ರಕರಣದ ಸಜಾ ಕೈದಿಯಾಗಿ ಪ್ರತ್ಯೇಕ ಬ್ಯಾರಕ್ನಲ್ಲಿರುವ ವಿಐಪಿ ಸಜಾ ಕೈದಿ ಪ್ರಜ್ವಲ್ ರೇವಣ್ಣ ಬಳಿ ಆ್ಯಂಡ್ರಾಯ್ಡ್ ಫೋನ್ ಹೇಗೆ ಬಂತು? ಎಷ್ಟು ದಿನಗಳಿಂದ ಬಳಕೆ ಮಾಡುತ್ತಿದ್ದರು, ಪ್ರಜ್ವಲ್ಗೆ ಮೊಬೈಲ್ ತಂದು ಕೊಟ್ಟವರು ಯಾರು ಎಂಬುದರ ಬಗ್ಗೆ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸಿಸಿಬಿ ಮುಂದಾಗಿದೆ. ಪ್ರಜ್ವಲ್ ಹಾಗೂ ಇತರರ ವಿರುದ್ಧ ಜೈಲು ನಿಯಮಗಳ ಉಲ್ಲಂಘನೆ ಸೇರಿ ಇನ್ನಿತರ ಕಲಂಗಳಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗುವುದು ಎಂದು ಮೂಲಗಳು ಹೇಳಿವೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿದಂತೆ ಹಲವು ಪ್ರಮುಖ ರೌಡಿಗಳು ಹಾಗೂ ವಿಐಪಿ ಕೈದಿಗಳ ಬ್ಯಾರಕ್ನಲ್ಲಿಯೂ ಶೋಧ ನಡೆಸಲಾಗಿದ್ದು, ಮೊಬೈಲ್ ಸೇರಿ ಯಾವುದೇ ವಸ್ತು ಆಸಿಗಲಿಲ್ಲ ಎಂದು ತಿಳಿದು ಬಂದಿದೆ.