ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತಲಿನ ನಿವಾಸಿಗಳು ಎದುರಿಸುತ್ತಿರುವ ಮೊಬೈಲ್ ನೆಟ್ವರ್ಕ್ ಮತ್ತು ಇಂಟರ್ನೆಟ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ ಅವರಿಗೆ ಪತ್ರ ಬರೆದಿರುವುದಾಗಿ ಸಂಸದ ಮಂಜುನಾಥ್ ಅವರು ಹೇಳಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ದೂರಸಂಪರ್ಕ ಇಲಾಖೆ ಕಾರ್ಯದರ್ಶಿ ಅಮಿತ್ ಅಗರ್ವಾಲ್ ಅವರನ್ನು ಭೇಟಿಯಾಗಿ ಸಮಸ್ಯೆಯ ಕುರಿತು ಗಮನ ಸೆಳೆದಿರುವುದಾಗಿ ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಟವರ್-ಹಾರ್ಮೋನಿಯಸ್ ಕಾಲ್ ಬ್ಲಾಕಿಂಗ್ ವ್ಯವಸ್ಥೆ ಹಾಗೂ ವೈ-ಫೈ ಜಾಮರ್ಗಳನ್ನು ಅಳವಡಿಸಿದ ಬಳಿಕ ಜೈಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ಸಂವಹನ ಮತ್ತು ಇಂಟರ್ನೆಟ್ ಸೇವೆಗಳಿಗೆ ತೀವ್ರ ಅಡಚಣೆ ಉಂಟಾಗಿದೆ.
ಇದರಿಂದ ಸ್ಥಳೀಯ ನಿವಾಸಿಗಳು ದೈನಂದಿನ ಜೀವನದಲ್ಲಿ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ, ಆನ್ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಾಗೂ ಮನೆಯಿಂದಲೇ ಕೆಲಸ ಮಾಡುವ ಉದ್ಯೋಗಿಗಳಿಗೆ ಸಂಪರ್ಕ ವ್ಯತ್ಯಯ ದೊಡ್ಡ ಸಮಸ್ಯೆಯಾಗಿದೆ.
ಇಲೆಕ್ಟ್ರಾನಿಕ್ಸ್ ಸಿಟಿಯಂತಹ ಪ್ರಮುಖ ಕಾರ್ಪೊರೇಟ್ ಕೇಂದ್ರ ಸಮೀಪದಲ್ಲಿರುವುದರಿಂದ ಈ ಪ್ರದೇಶದ ನಿವಾಸಿಗಳು ಮತ್ತು ವೃತ್ತಿಪರರಿಗೆ ವಿಶ್ವಾಸಾರ್ಹ ಮೊಬೈಲ್ ಹಾಗೂ ಇಂಟರ್ನೆಟ್ ಸಂಪರ್ಕ ಇನ್ನಷ್ಟು ಅಗತ್ಯವಾಗಿದೆ ಎಂದು ಹೇಳಿದ್ದಾರೆ.
ಜೈಲು ಭದ್ರತೆಯೂ ಮುಖ್ಯ, ಜನರ ಸಂಪರ್ಕವೂ ಅಗತ್ಯ
ಕೈದಿಗಳು ಅನಧಿಕೃತವಾಗಿ ಸಂವಹನ ನಡೆಸುವುದನ್ನು ತಡೆಯುವುದು ಹಾಗೂ ಜೈಲು ಭದ್ರತೆಯನ್ನು ಕಾಪಾಡುವುದು ಅತ್ಯಂತ ಮುಖ್ಯ. ಆದರೆ, ಜೈಲಿನ ಸುತ್ತಮುತ್ತ ವಾಸಿಸುವ ಜನರ ಕಾನೂನುಬದ್ಧ ಸಂವಹನದ ಅಗತ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೂಡ ಅಷ್ಟೇ ಮುಖ್ಯ.
ಈ ಸಮಸ್ಯೆಯನ್ನು ಪರಿಶೀಲಿಸಿ, ಸೂಕ್ತ ತಾಂತ್ರಿಕ ಪರಿಹಾರ ಕಂಡುಕೊಳ್ಳುವಂತೆ ದೂರಸಂಪರ್ಕ ಇಲಾಖೆ ಕಾರ್ಯದರ್ಶಿ ಅಮಿತ್ ಅಗರ್ವಾಲ್ ಅವರಿಗೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.