ಬೆಂಗಳೂರು: ಸಿದ್ದರಾಮಯ್ಯ ಸಂಪುಟದಿಂದ ಬಿ. ನಾಗೇಂದ್ರ ಅವರು ಏಕೆ ರಾಜೀನಾಮೆ ನೀಡಿದರು ಎಂಬುದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ರೂ.185 ಕೋಟಿ ಹಣಕಾಸು ಅಕ್ರಮ ಪ್ರಕರಣದಲ್ಲಿ ಆರೋಪಿಯಾಗಿರುವ ನಾಗೇಂದ್ರ ಅವರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ತನ್ನ ಒತ್ತಾಯವನ್ನು ಮುಂದುವರಿಸಲಿದೆ ಎಂದು ಹೇಳಿದರು.
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ರೂ.185 ಕೋಟಿ ಹಣಕಾಸು ಅಕ್ರಮ ಪ್ರಕರಣದಲ್ಲಿ ನಾಗೇಂದ್ರ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ನಿರಪರಾಧಿತ್ವವನ್ನು ಸಾಬೀತುಪಡಿಸಿದ ಬಳಿಕ ನಾಗೇಂದ್ರ ಅವರು ಮತ್ತೆ ಸಚಿವರಾಗುವುದಕ್ಕೆ ಬಿಜೆಪಿಗೆ ಯಾವುದೇ ಆಕ್ಷೇಪವಿಲ್ಲ ಎಂದು ತಿಳಿಸಿದರು.
ಬಿಜೆಪಿಗೆ ನಾಗೇಂದ್ರರ ಬಗ್ಗೆ ದ್ವೇಷ ಇಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ತಾವು ರಾಜೀನಾಮೆ ಕೊಡುವ ಪ್ರಸಂಗ ಯಾಕೆ ನಿರ್ಮಾಣವಾಯಿತೆಂದು ನಾಗೇಂದ್ರ ಅವರೇ ತಿಳಿಸಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂ. ಲೂಟಿಯ ಹಗರಣದಲ್ಲಿ ನಾಗೇಂದ್ರ ಅವರು ಆರೋಪಿ.
ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ತನಿಖೆ ಆರಂಭವಾಗಿದ್ದು, ತೆಲಂಗಾಣಕ್ಕೆ ಹಣ ವರ್ಗಾವಣೆಯಾಗಿ ದುರುಪಯೋಗ ಆಗಿರುವುದು ರಾಜ್ಯದ ಜನರಿಗೆ ಗೊತ್ತಿದೆ. ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದ್ದು, ಅಪರಾಧಿ ಸ್ಥಾನದಿಂದ ಅವರಿನ್ನೂ ಹೊರಬಂದಿಲ್ಲ. ನಿರಪರಾಧಿ ಎಂದು ಸಾಬೀತಾದ ಬಳಿಕ ಅವರು ಸಚಿವರಾದರೆ ನಮ್ಮದೇನೂ ಅಭ್ಯಂತರವಿಲ್ಲ. ನಾಗೇಂದ್ರ ಅವರೇ ಅಂಥ ಘೋರ ಆಪಾದನೆ, ಆರೋಪ ನಿಮ್ಮ ಮೇಲಿದ್ದ ಸಂದರ್ಭದಲ್ಲಿ ಈ ರೀತಿ ಜಾತಿ ಹೆಸರು ಹೇಳಿಕೊಂಡು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡದಿರಿ ಎಂದರು.