ಬೆಂಗಳೂರು: ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ PSI ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದುಅಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯಾನಾ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಭಟ್ಟರಹಳ್ಳಿ ಜಂಕ್ಷನ್ ಬಳಿ ಆರೋಪಿಗಳು ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಕಾನ್ಸ್ಟೇಬಲ್ ಮಂಜುನಾಥ್ ಜಗಳ ಮಾಡುತ್ತಿದ್ದರು. ಇದನ್ನು ಗಮನಿಸಿ PSI ನಯನಾ ಪರಿಸ್ಥಿತಿ ನಿಭಾಯಿಸಲು ಸ್ಥಳಕ್ಕೆ ತೆರಳಿದರು. ಈ ವೇಳೆ ಆರೋಪಿಗಳು ನಯನಾ ಅವರ ಮೇಲೆಯೇ ಹಲ್ಲೆ ಮಾಡಿದ್ದಲ್ಲೇ 'ಎಮ್ಮೆ ತರ ಇದ್ದೀಯಾ, ಹೊಟ್ಟೆಗೇನು ತಿಂತೀಯಾ?' ಎಂದು ಬಾಡಿ ಶೇಮಿಂಗ್ ಮಾಡಿದ್ದಾರೆ.
ಈ ಘಟನೆ ಕರ್ತವ್ಯದಲ್ಲಿದ್ದ ಸಿಬ್ಬಂದಿಯ ಬಾಡಿವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಕ್ಷ್ಯವನ್ನು ಆಧರಿಸಿ ನಾಲ್ವರು ಆರೋಪಿಗಳ ವಿರುದ್ಧ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.