ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದ ಮುಂಚೂಣಿ ರಾಜ್ಯವನ್ನಾಗಿಸುವ ಉದ್ದೇಶದಿಂದ ಕಂಠೀರವ ಕ್ರೀಡಾಂಗಣವನ್ನು ಸುಮಾರು 5,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕಂಠೀರವ ಕ್ರೀಡಾಂಗಣದ ಕರ್ನಾಟಕ ಒಲಿಂಪಿಕ್ ಭವನದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಸಂಸ್ಥೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಚಾಂಪಿಯನ್ಶಿಪ್ಗಳಲ್ಲಿ ಉತ್ತಮ ಸಾಧನೆ ಮಾಡಿದ ಕಿರಿಯ ಹಾಗೂ ಯುವ ಬಾಸ್ಕೆಟ್ಬಾಲ್ ತಂಡಗಳ ಆಟಗಾರರನ್ನು ಸನ್ಮಾನಿಸಿದರು.
ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಗಳಲ್ಲಿ 2% ಮೀಸಲಾತಿ ನೀಡಲಾಗುತ್ತಿದೆ. ಬಳಿಕ ಇದನ್ನು 3%ಕ್ಕೆ ಹೆಚ್ಚಿಸಲಾಗಿದೆ. ಇದರಡಿ ಹಲವು ಕ್ರೀಡಾಪಟುಗಳನ್ನು ಪಿಎಸ್ಐ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂದು ಹೇಳಿದರು.
ಪದಕ ವಿಜೇತ ಕ್ರೀಡಾಪಟುಗಳಿಗೆ ನೇರ ನೇಮಕಾತಿ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಖಾಲಿ ಇರುವ 72,000 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಈ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇ.2ರ ಮೀಸಲಾತಿಯ ಪ್ರಯೋಜನ ದೊರೆಯಲಿದೆ ಎಂದು ತಿಳಿಸಿದರು.
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಎಲ್ಲ ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ ಪ್ರೋತ್ಸಾಹಧನ ನೀಡಲಾಗಿದೆ. ಇನ್ನು ಮುಂದೆ ಪದಕ ವಿಜೇತರಿಗೆ ರೂ.15 ಲಕ್ಷ ಪ್ರೋತ್ಸಾಹಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.