ಬೆಂಗಳೂರು: ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಮನೆ ಹಾಗೂ ಕಚೇರಿ ಸೇರಿದಂತೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.
ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ಅವ್ಯಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ಮನೆ ಮತ್ತು ಕಲಬುರಗಿ ಜಿಲ್ಲೆ ಆಳಂದ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ.
ಕೆಪಿಎಸ್ ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮನೆ ಮೇಲೂ ರೇಡ್ ನಡೆದಿದ್ದು, ಪಶುವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದವರ ಮನೆಗಳು ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಅಭ್ಯರ್ಥಿಗಳಿಂದ 70-80 ಲಕ್ಷ ಲಂಚ ಪಡೆದಿರೋ ಆರೋಪ ಕೇಳಿಬಂದಿತ್ತು. ಮಧ್ಯವರ್ತಿಗಳ ಲಂಚದ ಬೇಡಿಕೆ ಕುರಿತು 4 ಎಫ್ಐಆರ್ ದಾಖಲಾಗಿದೆ. ಲಂಚದ ಬೇಡಿಕೆಯ ಆಡಿಯೋ ಸಾಕ್ಷ್ಯ ಇಡಿಗೂ ಸಲ್ಲಿಕೆಯಾಗಿತ್ತು. ಹೀಗಾಗಿ ನೇಮಕಾತಿ ಅಕ್ರಮದ ಹಣದ ಜಾಡು ಹಿಡಿದು ಇಡಿ ಶೋಧಕ್ಕೆ ಮುಂದಾಗಿದ್ದು, ದಾಖಲೆ, ಡಿಜಿಟಲ್ ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಿದೆ ಎನ್ನಲಾಗಿದೆ.
ತಮ್ಮ ಇಬ್ಬರು ಪುತ್ರಿಯರು ಕೈಗಾರಿಕಾ ವಿಸ್ತರಣಾಧಿಕಾರಿಯಾಗಿ ನೇಮಕವಾಗಲು ಸಹಕರಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅಮಾನಾತುಗೊಳಿಸಿದ್ದಾರೆ.
2019ರ ಸೆಪ್ಟೆಂಬರ್ 3ರಂದು ಕೆಪಿಎಸ್ಸಿ ಸದಸ್ಯರಾಗಿ ನೇಮಕವಾಗಿದ್ದ ಶಿವಶಂಕರಪ್ಪ ಅವರನ್ನು 2021ರ ಏಪ್ರಿಲ್ 3ರಂದು ಕೆಪಿಎಸ್ಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.