ಮುಂಬೈ: ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿನ್ ಅಂದುರೆಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ, 2024ರಲ್ಲಿ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನೂ ಅಮಾನತಿನಲ್ಲಿರಿಸಿದೆ.
ನ್ಯಾಯಮೂರ್ತಿಗಳಾದ ಸಾರಂಗ್ ಕೊತ್ವಾಲ್ ಮತ್ತು ರಂಜಿತಾ ಸಿನ್ಹಾ ಭೋಂಸಾಲೆ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಸಹ ದೋಷಿ ಶರದ್ ಕಲಾಸ್ಕರ್ ಗೆ ಈ ವರ್ಷದ ಏಪ್ರಿಲ್ನಲ್ಲಿ ನ್ಯಾಯಮೂರ್ತಿ ಅಜಯ್ ಗಡ್ಕರಿ ನೇತೃತ್ವದ ಪೀಠ ಜಾಮೀನು ನೀಡಿತ್ತು.
ವಿಚಾರವಾದಿ ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದಲ್ಲೂ ಸಚಿನ್ ಅಂದುರೆಗೆ ಈಗಾಗಲೇ ಜಾಮೀನು ದೊರೆತಿತ್ತು. ಆದರೆ, ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲೇ ಮುಂದುವರಿದಿದ್ದರು.
ಇದೀಗ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲೂ ಜಾಮೀನು ದೊರೆತಿರುವುದರಿಂದ ಸಚಿನ್ ಅಂದುರೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಮೂಢನಂಬಿಕೆ ವಿರೋಧಿ ಸಂಸ್ಥೆಯಾದ ‘ಮಹಾರಾಷ್ಟ್ರ ಅಂದಶ್ರದ್ಧಾ ನಿರ್ಮೂಲನ ಸಮಿತಿ’ಯ ಸಂಸ್ಥಾಪಕರಾದ 67 ವರ್ಷ ವಯಸ್ಸಿನ ದಾಬೋಲ್ಕರ್ ಅವರನ್ನು ಪುಣೆಯಲ್ಲಿ 2013 ಆಗಸ್ಟ್ 20ರಂದು ಮೋಟಾರು ಸೈಕಲ್ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.
ಆರಂಭದಲ್ಲಿ ಈ ಪ್ರಕರಣ ತನಿಖೆಯನ್ನು ಸ್ಥಳೀಯ ಪೊಲೀಸರು ನಡೆಸಿದ್ದರು. ಆದರೆ, ಅವರ ಪುತ್ರಿ ಮುಕ್ತಾ ದಾಬೋಲ್ಕರ್ ಅವರು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ನಂತರ, 2014ರಲ್ಲಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಯಿತು.