ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಂಡ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರು ನಡೆಸುತ್ತಿರುವ ಪ್ರತಿಭಟನೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ರೈತರ ಸಮಸ್ಯೆಗಳನ್ನು ಸರ್ಕಾರ ಅರ್ಥಮಾಡಿಕೊಂಡಿದ್ದು, ರೈತರ ವಿರುದ್ಧ ಸರ್ಕಾರವಿಲ್ಲ ಎಂದು ಸಚಿವ ಎನ್. ಚಲುವರಾಯಸ್ವಾಮಿ ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡುವ ಆದೇಶಕ್ಕಾಗಿ ಕಾಯಬೇಕು ಎಂದು ರೈತರಿಗೆ ಮನವಿ ಮಾಡಿದರು.
ಮಂಡ್ಯ ಹಾಗೂ ಕಾವೇರಿ ಭಾಗದ ರೈತರ ಆತಂಕಗಳು ಸರ್ಕಾರದ ಗಮನದಲ್ಲಿದ್ದು, ಅವರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಮಂಡ್ಯ ಹಾಗೂ ಕಾವೇರಿ ಜಲಾನಯನ ಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿರುವುದು ನನಗೆ ಗೊತ್ತಿದೆ. ಆದರೆ, ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕಾಗಿ ಕಾಯಬೇಕಾಗಿದೆ. ನಾವು ರೈತರ ವಿರುದ್ಧವಲ್ಲ. ಮಂಡ್ಯ ಸೇರಿದಂತೆ ಇತರ ಭಾಗಗಳ ರೈತರ ಸಮಸ್ಯೆಗಳು ನಮಗೆ ತಿಳಿದಿವೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಈ ವಿಚಾರದ ಬಗ್ಗೆ ಸಂಪೂರ್ಣ ಅರಿವಿದೆ. ಅವರೂ ಇದೇ ಕಾವೇರಿ ಭಾಗದಿಂದ ಬಂದವರು” ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳುತ್ತಿದ್ದು, ಬಳಿಕ ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ. “ಒಳ್ಳೆಯದಾಗಲಿ ಎಂದು ಆಶಿಸೋಣ” ಎಂದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕುರಿತು ನೀಡಿರುವ ಹೇಳಿಕೆಗೆ ಚಲುವರಾಯಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಅವರ ಹೇಳಿಕೆಯನ್ನು “ನಾಚಿಕೆಗೇಡಿನ ಹಾಗೂ ಆಕ್ಷೇಪಾರ್ಹ ಹೇಳಿಕೆ” ಎಂದು ಟೀಕಿಸಿದರು.
ಕುಮಾರಸ್ವಾಮಿ ಅವರಂತಹ ವ್ಯಕ್ತಿಯಿಂದ ಇಂತಹ ಹೇಳಿಕೆ ಬಂದಿರುವುದು ನಾಚಿಕೆಗೇಡಿನ ಸಂಗತಿ. ಅವರು ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದವರು. ದೊಡ್ಡ ಕುಟುಂಬದಿಂದ ಬಂದವರು. ಜೊತೆಗೆ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇಂತಹ ವ್ಯಕ್ತಿ ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡುವುದು ಅತ್ಯಂತ ಆಕ್ಷೇಪಾರ್ಹ ಎಂದು ಹೇಳಿದರು.
ಸೋನಿಯಾ ಗಾಂಧಿ ಭಾರತವನ್ನು ತಮ್ಮ ದೇಶವನ್ನಾಗಿ ಸ್ವೀಕರಿಸಿ ಭಾರತೀಯರಾಗಿದ್ದಾರೆ. ಅವರನ್ನು ಕುರಿತು ಇಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ತಿಳಿಸಿದರು.