ಬೆಂಗಳೂರು: ಕರ್ನಾಟಕದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ಕಾಲೇಜುಗಳು ಪ್ರಾಂಶುಪಾಲರಿಲ್ಲದೆ ಕಾರ್ಯನಿರ್ವಹಿಸುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ವಿಧಾನ ಪರಿಷತ್ಗೆ ತಿಳಿಸಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ಅನುದಾನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರು ಗಮನ ಸೆಳೆಯುವ ಸೂಚನೆ ಮಂಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈ ಮಾಹಿತಿ ನೀಡಿದರು.
ಪ್ರಾಂಶುಪಾಲರ ಹುದ್ದೆಗಳ ಖಾಲಿ ಸ್ಥಾನಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ. ಆದರೆ, ಈಗಿರುವ ಕಾಲೇಜುಗಳ ಮೂಲಸೌಕರ್ಯವನ್ನು ಬಲಪಡಿಸುವುದಕ್ಕೆ ಸರ್ಕಾರ ಆದ್ಯತೆ ನೀಡಲಿದ್ದು, ತಕ್ಷಣವೇ ಹೊಸ ಕಾಲೇಜುಗಳನ್ನು ಸ್ಥಾಪಿಸುವುದಿಲ್ಲ ಎಂದು ಸರ್ಕಾರದ ಉತ್ತರದಲ್ಲಿ ತಿಳಿಸಲಾಗಿದೆ.
ದಾವಣಗೆರೆ ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು 19 ಪದವಿ ಕಾಲೇಜುಗಳಿವೆ. ಇವುಗಳಲ್ಲಿ 11 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಎಂಟು ಖಾಸಗಿ ಅನುದಾನಿತ ಪದವಿ ಕಾಲೇಜುಗಳಿವೆ. ಮೂಲಸೌಕರ್ಯ ಸೌಲಭ್ಯಗಳನ್ನು ಹೊಂದಿರುವ ಈ ಕಾಲೇಜುಗಳ ಪ್ರಯೋಜನವನ್ನು ದಾವಣಗೆರೆ ದಕ್ಷಿಣ ಕ್ಷೇತ್ರದ ವಿದ್ಯಾರ್ಥಿಗಳು ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ.
ಉನ್ನತ ಶಿಕ್ಷಣಕ್ಕೆ ಪ್ರವೇಶವನ್ನು ಸುಲಭಗೊಳಿಸುವ ಹಾಗೂ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕ್ಷೇತ್ರದಲ್ಲಿ ಹೊಸ ಕಾಲೇಜು ಸ್ಥಾಪಿಸಬೇಕು ಎಂದು ಜಬ್ಬಾರ್ ಒತ್ತಾಯಿಸಿದರು.
2026-27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾಗಿರುವ ಎಂಟು ಹೊಸ ಸರ್ಕಾರಿ ಪ್ರಥಮ ದರ್ಜೆ/ವಸತಿ ಪದವಿ ಕಾಲೇಜುಗಳನ್ನು ಸ್ಥಾಪಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಯರೆಡ್ಡಿ ತಿಳಿಸಿದರು.
ದಾವಣಗೆರೆಯಲ್ಲಿ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸುವ ಪ್ರಸ್ತಾವನೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಹೊಸ ಕಾಲೇಜುಗಳ ಸ್ಥಾಪನೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಪರಿಶೀಲಿಸಲು ರಚಿಸಲಾಗಿರುವ ಐವರು ಸದಸ್ಯರ ಸಮಿತಿಯನ್ನು ಪುನರ್ರಚಿಸುವ ಬಗ್ಗೆಯೂ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಸಚಿವರು ತಿಳಿಸಿದರು.