ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿ(ಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟ ಆರೋಪದ ಮೇಲೆ ಬಾಣಸವಾಡಿ ನಿವಾಸಿ ನವೀನ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ದ ನವೀನ್ಗೆ ಪ್ರತಾಪ್ ರಾಯ್ ಎಂಬಾತನ ಪರಿಚಯವಾಗಿದ್ದು, ಜೈಲಿನಿಂದ ಹೊರಬಂದ ಬಳಿಕ ನವೀನ್, ಪ್ರತಾಪ್ ರಾಯ್ಗೆ ಅಕ್ರಮವಾಗಿ ಮೊಬೈಲ್ ಫೋನ್ ತಲುಪಿಸಿದ್ದ. ಇದಕ್ಕಾಗಿ ಇಬ್ಬರ ನಡುವೆ ದೊಡ್ಡ ಮಟ್ಟದ ಹಣದ ವ್ಯವಹಾರವೂ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.