ಬೆಂಗಳೂರು/ಮಂಡ್ಯ: ಕೆಆರ್ಎಸ್ ಅಣೆಕಟ್ಟಿನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಕಾವೇರಿ ಜಲಾನಯನ ಪ್ರದೇಶದಲ್ಲಿ, ವಿಶೇಷವಾಗಿ ಮಂಡ್ಯದಲ್ಲಿ ರೈತರು ಗುರುವಾರ ಪ್ರತಿಭಟನೆಯನ್ನು ತೀವ್ರಗೊಳಿಸಿದರು.
ಆಗಸ್ಟ್ 12 ರಿಂದ 15 ದಿನಗಳವರೆಗೆ ನಿತ್ಯ 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯೂಆರ್ಸಿ) ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಎತ್ತಿಹಿಡಿದಿದೆ.
ಸಿಡಬ್ಲ್ಯೂಎಂಎ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ ಎಂದು ಆರೋಪಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ರೈತರು ಇಂದು ಧರಣಿ ನಡೆಸಿದರು.
ಕನ್ನಡ ಸೇನೆ ಕಾರ್ಯಕರ್ತರು, ರೈತ ಸಂಘಟನೆಯ ಪ್ರತಿಭಟನೆಗೆ ಬೆಂಬಲ ನೀಡಿ ಹಳೆಯ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದರು.
ಅಣೆಕಟ್ಟಿನಲ್ಲಿ ಕೇವಲ 109 ಅಡಿ ನೀರು ಮಾತ್ರ ಇದ್ದು, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕನ್ನಡ ಕಾರ್ಯಕರ್ತ ವಾಟಾಳ್ ನಾಗರಾಜ್, ದೇಶಾದ್ಯಂತ ಬಲವಾದ ಸಂದೇಶವನ್ನು ರವಾನಿಸಲು ಕರ್ನಾಟಕದ ಜನ ಒಗ್ಗೂಡಿ ಈ ಪ್ರತಿಭಟನೆಯನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದ ರವಿಕುಮಾರ್ ಗಣಿಗ
ಮಂಡ್ಯ ಶಾಸಕ ರವಿಕುಮಾರ್ ಗೌಡ(ಗಣಿಗ) ಅವರು ಸಹ ತಮ್ಮದೇ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.
ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ರವಿಕುಮಾರ್ ಗಣಿಗ, ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮ ರಾಜ್ಯದ ರೈತರಿಗೆ ಬೆಳೆಗಳಿಗೆ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾದರೆ ಸಮಸ್ಯೆ ಮತ್ತಷ್ಟು ಗಂಭೀರವಾಗಲಿದೆ ಎಂದು ಹೇಳಿದ್ದಾರೆ.
"ಒಂದೆಡೆ, ನೀವು ತಮಿಳುನಾಡಿಗೆ ನೀರು ಬಿಡುತ್ತಿದ್ದೀರಿ, ಮತ್ತೊಂದೆಡೆ ನೀವು ನಮಗೆ ನೀರು ಕೊಡುವುದಿಲ್ಲ ಎಂದು ಹೇಳುತ್ತಿದ್ದೀರಿ. ನಮ್ಮ ರೈತರಿಗೆ ಅವರ ಬೆಳೆಗಳಿಗೆ ನೀರು ಕೊಡದಿದ್ದರೆ, ಗಂಭೀರ ಪರಿಸ್ಥಿತಿಯನ್ನು ಎಧುರಿಸಬೇಕಾಗುತ್ತದೆ" ಎಂದು ರಾಜ್ಯ ಸರ್ಕಾರ ಎಚ್ಚರಿಸಿದರು.