ಬೆಂಗಳೂರು: ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐನಂತಹ ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದಾಗಿ 12 ಲಕ್ಷ ಉದ್ಯಮಿಗಳು ದೇಶ ತೊರೆದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಾಮಾಣಿಕವಾಗಿ ತೆರಿಗೆ ಪಾವತಿಸುವ ಉದ್ಯಮಿಗಳು ಮಾನಸಿಕ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ. ಆದರೆ, ಅಕ್ರಮಗಳಲ್ಲಿ ತೊಡಗಿರುವವರನ್ನು ಸಮರ್ಪಕವಾಗಿ ಪ್ರಶ್ನಿಸಲಾಗುತ್ತಿಲ್ಲ ಎಂದು ಆರೋಪಿಸಿದರು.
ಐಟಿ, ಇಡಿ ಮತ್ತು ಸಿಬಿಐ ಅವರ ಪಾಲಿಗೆ ಅತಿಯಾಗಿವೆ. ಹೀಗಾಗಿ ಅವರು ದೇಶವನ್ನೇ ತೊರೆಯುತ್ತಿದ್ದಾರೆಯ ಅಗತ್ಯವಿಲ್ಲದ ಕಿರುಕುಳವಿಲ್ಲದೆ ಸುಗಮವಾಗಿ ಕಾರ್ಯನಿರ್ವಹಿಸಲು ಉದ್ಯಮಗಳಿಗೆ ಅನುಕೂಲಕರ ವಾತಾವರಣವನ್ನು ಸರ್ಕಾರ ನಿರ್ಮಿಸಬೇಕು.
ರಾಜ್ಯದ ಆದಾಯ ಹೆಚ್ಚಿಸುವುದು, ಸೋರಿಕೆಯನ್ನು ತಡೆಗಟ್ಟುವುದು ಹಾಗೂ ಹಣಕಾಸು ನಿರ್ವಹಣೆಯಲ್ಲಿನ ಲೋಪಗಳನ್ನು ಸರಿಪಡಿಸುವ ಕುರಿತು ಚಾರ್ಟರ್ಡ್ ಅಕೌಂಟೆಂಟ್ಗಳು ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಮನವಿ ಮಾಡಿದರು.
ಹೊಸ ಆಲೋಚನೆಗಳು ಮತ್ತು ಪರಿಹಾರಗಳನ್ನು ಸ್ವಾಗತಿಸಲು ನಾವು ಸಿದ್ಧರಿದ್ದೇವೆ. ನಮ್ಮ ತಪ್ಪುಗಳನ್ನು ಸರಿಪಡಿಸಲು ನಿಮ್ಮ ಸಲಹೆಗಳನ್ನು ನೀಡಿ ಎಂದು ಹೇಳಿದರು.
ಕರ್ನಾಟಕ ಆರ್ಥಿಕ ಶಕ್ತಿಕೇಂದ್ರವಾಗಿ ಹೊರಹೊಮ್ಮುತ್ತಿದ್ದು, ರಾಜ್ಯದ ಆರ್ಥಿಕ ಬೆಳವಣಿಗೆಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಇದೇ ವೇಳೆ ದೇಶದ ಆರ್ಥಿಕತೆಗೆ ಕರ್ನಾಟಕದ ಕೊಡುಗೆಯನ್ನು ಪ್ರಸ್ತಾಪಿಸಿದ ಶಿವಕುಮಾರ್ ಅವರು, ದಕ್ಷಿಣ ಭಾರತವು ಭಾರತದ ಪ್ರಗತಿಯನ್ನು ಮುನ್ನಡೆಸುವ ‘ಇಂಧನ’ ಎಂದು ಬಣ್ಣಿಸಿದರು.
ದೇಶದಲ್ಲಿ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯ ಕರ್ನಾಟಕವಾಗಿದ್ದು, ತನ್ನ ಕೊಡುಗೆಗೆ ಅನುಗುಣವಾಗಿ ರಾಜ್ಯಕ್ಕೆ ಸಂಪನ್ಮೂಲಗಳ ನ್ಯಾಯಯುತ ಪಾಲು ದೊರೆಯಬೇಕು ಎಂದು ಪ್ರತಿಪಾದಿಸಿದರು. ಇತರ ಹಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಔಪಚಾರಿಕ ವಹಿವಾಟಿನ ಪ್ರಮಾಣ ಹೆಚ್ಚಾಗಿದೆ ಎಂದರು.
ಗುಜರಾತ್ನಲ್ಲಿದ್ದ ತಮ್ಮ ಅನುಭವವನ್ನು ಉಲ್ಲೇಖಿಸಿದ ಅವರು, ಅಲ್ಲಿ ಸುಮಾರು 70% ವಹಿವಾಟುಗಳು ನಗದು ರೂಪದಲ್ಲಿದ್ದರೆ, ಕರ್ನಾಟಕದಲ್ಲಿ ಸುಮಾರು 90% ವಹಿವಾಟುಗಳು ಔಪಚಾರಿಕ ಮಾರ್ಗಗಳ ಮೂಲಕ ನಡೆಯುತ್ತಿವೆ ಎಂದು ಹೇಳಿದರು.
ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ಪ್ರತಿಕೂಲ ಪರಿಣಾಮ ಬೀರದಂತೆ ಸರ್ಕಾರದ ಆದಾಯವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳ ಕುರಿತು ಚಾರ್ಟರ್ಡ್ ಅಕೌಂಟೆಂಟ್ಗಳು ಸಲಹೆ ನೀಡಬೇಕು ಎಂದು ಮನವಿ ಮಾಡಿದರು.