ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಕರ್ನಾಟಕದ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತ್ತು.
ಕೆಪಿಎಸ್ ಸಿ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದರು. ಈ ದಾಳಿ ಬೆನ್ನಲ್ಲೇ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಪರೀಕ್ಷೆ ನಡೆಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು ನಾಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಐಎಎಸ್ ಐಧಿಕಾರಿ ಜ್ಞಾನೇಂದ್ರ ಕುಮಾರ್ ಜೊತೆ ನಾನೇ ಖುದ್ದು ಮಾತನಾಡಿದ್ದೇನೆ. ಅವರು ನಾಪತ್ತೆಯಾಗಿಲ್ಲ. ಅವರ ತಂದೆಗೆ ಅನಾರೋಗ್ಯವಾಗಿದ್ದರಿಂದ ಅವರು ತಮ್ಮ ಊರಾದ ಉತ್ತರಪ್ರದೇಶಕ್ಕೆ ಹೋಗಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯಂತೆ ಅವರು ನಾಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಅವರು ತುರ್ತು ಕಾರಣಕ್ಕೆ ತಮ್ಮ ಊರಿಗೆ ಹೋಗಿದ್ದು, ಇನ್ನೆರಡು ದಿನದಲ್ಲಿ ವಾಪಸ್ ಬರುವುದಾಗಿ ಹೇಳಿದ್ದಾರೆ. ಸರ್ಕಾರಿ ಅಧಿಕಾರಿಯಾಗಿರುವುದರಿಂದ ಯಾವುದೇ ತನಿಖೆ ವಿಚಾರಣೆಗೂ ಸಿದ್ಧ ಎಂದು ತಿಳಿಸಿದ್ದಾರೆ ಎಂದರು.
ಈ ಹಿಂದೆ ಜ್ಞಾನೇಂದ್ರ ಕುಮಾರ್ ಕೆಪಿಎಸ್ ಸಿ ಯಲ್ಲಿ ಕಾರ್ಯನಿರ್ವಹಿಸಿದ್ದರು. ಈಗ ಕೆಪಿಎಸ್ ಸಿ ಹಗರಣ ಸಂಬಂಧ ಇಡಿ ದಾಳಿ, ತನಿಖೆ ನಡೆಯುತ್ತಿದೆ. ಇದೇ ಕಾರಣಕ್ಕೆ ಭಯಗೊಂಡು ನಾಪತ್ತೆಯಾಗಿದ್ದಾರೆ ಎಂದು ಸುದ್ದಿಯಾಗುತ್ತಿದೆ. ಆದರೆ ಅವರ ವಿರುದ್ಧ ಅಂತಹ ಯಾವುದೇ ಆರೋಪಗಳು ಇಲ್ಲ. ಯಾವುದೇ ಕೇಸ್ ಕೂಡ ಅವರ ಮೇಲಿಲ್ಲ. ಹಾಗೊಂದು ವೇಳೆ ವಿಚಾರಣೆಗಳಿದ್ದರೆ ತನಿಖೆಯಾಗಲಿ ಎಂದು ಅವರು ತಿಳಿಸಿದ್ದಾರೆ ಎಂದು ಖರ್ಗೆ ಹೇಳಿದರು.