ಮಂಡ್ಯ: ಮಂಡ್ಯದಲ್ಲಿ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಮನೆಯಲ್ಲಿ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾಗಿರುವ ಘಟನೆ ಗುತ್ತಲು ಬಡಾವಣೆಯಲ್ಲಿ ನಡೆದಿದೆ.
ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದ್ದು, ಆಕೆಯ ಮನೆಯಲ್ಲಿ ಮೂಟೆಗಳಲ್ಲಿ ನೋಟು, ಚಿಲ್ಲರೆ ಕಾಸು ಸೇರಿದಂತೆ ಲಕ್ಷಾಂತರ ರೂಪಾಯಿ ಪತ್ತೆ ಆಗಿದೆ. ವೃದ್ಧೆಯ ಮನೆಯಲ್ಲಿ ಸಿಕ್ಕ ಹಣ ನೋಡಿ ಊರಿನ ಜನರೇ ಶಾಕ್ ಆಗಿದ್ದಾರೆ.
ಮಂಡ್ಯ ನಗರದ ಗುತ್ತಲು ಬಡಾವಣೆಯ ನಿವಾಸಿಯಾಗಿದ್ದ ನೂರ್, ಕುಟುಂಬಸ್ಥರ ಆಸರೆ ಇಲ್ಲದೇ ಹಲವು ವರ್ಷಗಳಿಂದ ನಗರದ ವಿವಿಧೆಡೆ ಭಿಕ್ಷಾಟನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಶನಿವಾರ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ವೃದ್ಧೆಯ ನಿಧನದ ಬಳಿಕ ಸಂಬಂಧಿಕರು ಹಾಗೂ ಸ್ಥಳೀಯರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರದ ನಂತರ ನೂರ್ ವಾಸವಿದ್ದ ಮನೆಗೆ ಹೋಗಿ ಪರಿಶೀಲಿಸಿದಾಗ ಮೂಟೆಗಟ್ಟಲೆ ನಾಣ್ಯಗಳು ಹಾಗೂ ಕರೆನ್ಸಿ ನೋಟುಗಳ ಕಂತೆಗಳು ಪತ್ತೆಯಾಗಿವೆ.
ಮನೆಯಲ್ಲಿ 8 ಲಕ್ಷ ರೂಪಾಯಿ ಪತ್ತೆ
ನೂರ್ ಮನೆಯ ಮೂಲೆ ಮೂಲೆಗಳಲ್ಲಿ ಪ್ಲಾಸ್ಟಿಕ್ ಕವರ್ಗಳಲ್ಲಿ ಸುತ್ತಿಟ್ಟಿದ್ದ ನೋಟಿನ ಕಂತೆಗಳು ಹಾಗೂ ಚೀಲಗಳಲ್ಲಿ ತುಂಬಿಟ್ಟಿದ್ದ ರಾಶಿಗಟ್ಟಲೆ ನಾಣ್ಯಗಳು ಪತ್ತೆಯಾಗಿವೆ. ಸ್ಥಳೀಯರು ಮತ್ತು ಸಂಬಂಧಿಕರು ಒಟ್ಟಾಗಿ ಕುಳಿತು ಬೆಳಗ್ಗೆಯಿಂದ ಸಂಜೆಯವರೆಗೆ ಎಣಿಕೆ ನಡೆಸಿದಾಗ ಆ ಒಟ್ಟು ಮೊತ್ತ ಬರೋಬ್ಬರಿ 8 ಲಕ್ಷ ರೂಪಾಯಿಗೂ ಹೆಚ್ಚು ಎನ್ನಲಾಗಿದೆ.
ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ಸ್ಥಳೀಯ ಮುಖಂಡರು ಮಾತುಕತೆ ನಡೆಸಿ ಕೊನೆಗೆ ಆ ಸಂಪೂರ್ಣ ಹಣವನ್ನು ಮೃತ ವೃದ್ಧೆಯ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ.