ಚಿತ್ರದುರ್ಗ: ದಾವಣಗೆರೆ ಕಾಂಗ್ರೆಸ್ ಶಾಸಕ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಸೋಮವಾರ ಸಂಜೆ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಶಾಸಕರು ಅಪಾಯದಿಂದ ಪಾರಾಗಿದ್ದಾರೆ.
ನಿನ್ನೆ ಸಂಜೆ ಸಮರ್ಥ್ ಶಾಮನೂರು ಅವರು ಬೆಂಗಳೂರಿನಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಸಂಡೂರು ಮೂಲದ ಸಂದೀಪ್ ಎನ್ನುವವರ ಇನೋವಾ ಕಾರು, ಬೆಂಗಳೂರಿನಿಂದ ಹಿರಿಯೂರು ಕಡೆಗೆ ಹೋಗುವಾಗ ಕೆಆರ್ ಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಹಿಂಬದಿಯಲ್ಲೇ ಬರುತ್ತಿತ್ತು ಸಮರ್ಥ್ ಅವರ ಕಾರು, ಪಲ್ಟಿಯಾದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಪಲ್ಟಿಯಾದ ಕಾರಿನಲ್ಲಿದ್ದ ಸಂದೀಪ್ (45) ಎಂಬುವವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಸಂದೀಪ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಲ್ಲಿ ಶಾಸಕ ಸಮರ್ಥ್ ಶಾಮನೂರು ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದ ನಂತರ ಮತ್ತೊಂದು ಕಾರಿನಲ್ಲಿ ದಾವಣಗೆರೆಗೆ ಪ್ರಯಾಣ ಮುಂದುವರಿಸಿದ್ದಾರೆ.
ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.