ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿದೆ.
ಹೌದು.. ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗು ಜಿಲ್ಲೆಯಾದ್ಯಂತ ನದಿಗಳು, ಹಳ್ಳ-ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಮತ್ತಷ್ಟು ಮಳೆ ಮುಂದುವರಿದರೆ ಪ್ರವಾಹದ ಆತಂಕ ಎದುರಾಗಿದೆ.
ಭಾಗಮಂಡಲದ ಪ್ರಸಿದ್ಧ ತ್ರಿವೇಣಿ ಸಂಗಮ ನೀರಿನಿಂದ ಭರ್ತಿಯಾಗಿದ್ದು, ನದಿ ನೀರು ಏರಿಕೆಯಾಗಿ ಸುತ್ತಮುತ್ತಲಿನ ಕೃಷಿ ಜಮೀನುಗಳಿಗೆ ನುಗ್ಗಿದೆ. ಸಂಗಮದ ನೀರು ಉಕ್ಕಿ ಹರಿದು ಐತಿಹಾಸಿಕ ಭಗಂಡೇಶ್ವರ ದೇವಸ್ಥಾನದ ಮೆಟ್ಟಿಲುಗಳವರೆಗೂ ತಲುಪಿದೆ.
ನೀರಿನ ಮಟ್ಟ ಏರಿಕೆಯಿಂದ ದೇವಾಲಯದ ಎರಡು ಮೆಟ್ಟಿಲುಗಳು ಮುಳುಗಿವೆ. ತಲಕಾವೇರಿಯಲ್ಲೂ ಅತಿ ಭಾರಿ ಮಳೆಯಾಗಿದ್ದು, ಇದರಿಂದ ಭಾಗಮಂಡಲದ ಸಂಗಮದಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ.
ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ದೈನಂದಿನ ಚಟುವಟಿಕೆಗಳಿಗೆ ಅಡ್ಡಿಯಾಗಿದೆ. ತಗ್ಗು ಪ್ರದೇಶಗಳಲ್ಲಿ ಜಲಾವೃತದ ಆತಂಕವೂ ಹೆಚ್ಚಿದೆ. ಇದೇ ವೇಳೆ ಕುಮಾರ ಪರ್ವತ, ಬಿಸಿಲೆ ಘಾಟ್ ಹಾಗೂ ತಲಕಾವೇರಿ ಪ್ರದೇಶಗಳಲ್ಲಿ ಬೆಳಗ್ಗೆಯಿಂದಲೇ ಉತ್ತಮ ಮಳೆಯಾಗಿದೆ. ಜಿಲ್ಲೆಯ ಗಾಳಿ ಬೀಸುವ ಮತ್ತು ಗಾಳಿ ತಡೆಯುವ ಎರಡೂ ಬದಿಗಳಲ್ಲೂ ಮಳೆಯಾಗಿರುವುದು ವರದಿಯಾಗಿದೆ.
ನಿರಂತರವಾಗಿ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ವಿವಿಧ ನದಿಗಳು ಮತ್ತು ಹಳ್ಳಗಳ ನೀರಿನ ಮಟ್ಟ ಏರುತ್ತಿದೆ. ಮಳೆ ಇದೇ ರೀತಿ ಮುಂದುವರಿದರೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.
ಪಶ್ಚಿಮ ಘಟ್ಟ, ಕುಕ್ಕೆ ಸುಬ್ರಹ್ಮಣ್ಯದಲ್ಲೂ ಭಾರಿ ಮಳೆ
ಕೊಡಗು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಉತ್ತಮ ಮಳೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ನದಿಗಳ ನೀರಿನ ಮಟ್ಟದ ಮೇಲೂ ನಿಗಾ ಇಡಲಾಗಿದೆ.
ಪಶ್ಚಿಮ ಘಟ್ಟ ಪ್ರದೇಶ, ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆಯಾಗಿದೆ. ಸುಬ್ರಹ್ಮಣ್ಯದ ದರ್ಪಣ ತೀರ್ಥ ಹೊಳೆ ಉಕ್ಕಿ ಹರಿದಿದೆ. ಕುಕ್ಕೆ ಸುಬ್ರಹ್ಮಣ್ಯದ ಆದಿಕ್ಷೇತ್ರದ ಪಕ್ಕದಲ್ಲೇ ದರ್ಪಣ ತೀರ್ಥ ಹೊಳೆ ಇದೆ. ಭಾರೀ ಮಳೆಯಿಂದಾಗಿ ಹೊಳೆ ಉಕ್ಕಿ ಹರಿದಿದೆ. ಹೊಳೆ ನೀರು ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲವರೆಗೂ ನುಗ್ಗಿದೆ.
ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು
ಧಾರಾಕಾರ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ (Harangi Dam) ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಮಧ್ಯಾಹ್ನದ ಬಳಿಕ ಜಲಾಶಯಕ್ಕೆ ಸುಮಾರು 9 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಭದ್ರತೆ ಹಾಗೂ ನೀರಿನ ಮಟ್ಟವನ್ನು ನಿಯಂತ್ರಿಸುವ ಉದ್ದೇಶದಿಂದ ಹಾರಂಗಿ ಜಲಾಶಯದಿಂದ ಮತ್ತೆ 11 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದೆ.
ಭಾರಿ ಪ್ರಮಾಣದ ನೀರು ಬಿಡುಗಡೆ
ಹಾರಂಗಿಯಿಂದ ಭಾರಿ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲೂ ನೀರಿನ ಹರಿವು ಹೆಚ್ಚಾಗುವ ನಿರೀಕ್ಷೆಯಿದೆ. ಜಲಾಶಯದಿಂದ ನೀರು ಬಿಡುಗಡೆಯಾಗಿರುವುದು ಕಾವೇರಿ ನದಿಯ ಆಶ್ರಿತ ಪ್ರದೇಶದ ಜನರಲ್ಲಿ ಹರ್ಷ ಮೂಡಿಸಿದೆ. ಒಟ್ಟಿನಲ್ಲಿ, ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಾರಂಗಿ ಜಲಾಶಯದ ಒಳಹರಿವನ್ನು ಹೆಚ್ಚಿಸಿದ್ದು, ಕಾವೇರಿ ನದಿಗೂ ಮತ್ತೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ.