ಬೆಂಗಳೂರು: ಭ್ರಷ್ಟಾಚಾರ ಮತ್ತು ದೊಡ್ಡ ಪ್ರಮಾಣದ ಅಕ್ರಮಗಳ ಆರೋಪಗಳ ಸಂಬಂಧ ರಾಜ್ಯ ಸಚಿವ ಸಂಪುಟ ಸಲಹೆಯ ಮೇರೆಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು, ಇಂದು ಮತ್ತೆ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದಾರೆ.
ಶಿವಶಂಕರಪ್ಪರನ್ನು ಅಮಾನತುಗೊಳಿಸಿರುವುದು ಇದು ಎರಡನೇ ಬಾರಿ. ಜುಲೈ 13ರಂದು ರಾಜ್ಯಪಾಲರು ಸಾಹುಕರ್ ಅವರನ್ನು ಅಮಾನತುಗೊಳಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಕ್ರಮದಲ್ಲಿ 'ರಾಜ್ಯ ಸಚಿವ ಸಂಪುಟದ ಸಲಹೆ' ಇಲ್ಲ ಎಂಬ ಕಾರಣಕ್ಕೆ ಆದೇಶವನ್ನು ರದ್ದುಗೊಳಿಸಿತು. ಇದರ ಬೆನ್ನಲ್ಲೇ ಆಗಸ್ಟ್ 21ರಂದು ರಾಜ್ಯ ಸಚಿವ ಸಂಪುಟವು ಶಿವಶಂಕರಪ್ಪರನ್ನು ಅಮಾನತುಗೊಳಿಸಲು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು.
ಭಾರತದ ಸಂವಿಧಾನದ 317 (2)ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳ ಮುಂದಿನ ಆದೇಶದವರೆಗೂ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಹುಕಾರ್ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಕೈಗಾರಿಕಾ ವಿಸ್ತರಣಾ ಅಧಿಕಾರಿಗಳಾಗಿ ಅಕ್ರಮವಾಗಿ ಆಯ್ಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬ ಆರೋಪದ ನಂತರ ರಾಜ್ಯಪಾಲರು ಅವರನ್ನು ಅಮಾನತುಗೊಳಿಸಿದ್ದಾರೆ. ಪಶುವೈದ್ಯಕೀಯ ವೈದ್ಯರ ನೇಮಕಾತಿಯಲ್ಲಿಯೂ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.