ವಿಜಯಪುರ: ವಿಜಯಪುರ ನಗರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಇಂದು ಬುಧವಾರ ಬೆಳಗ್ಗೆ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು ಆರು ಮೃತದೇಹಗಳು ತೇಲುತ್ತಿರುವುದು ಪತ್ತೆಯಾಗಿದೆ.
ಬೆಳಗಿನ ಜಾವ ವಾಯುವಿಹಾರಕ್ಕೆ ಬಂದವರು ಕೆರೆಯ ದಂಡೆಯ ಬಳಿ ಮೃತದೇಹಗಳನ್ನು ಕಂಡು ತಕ್ಷಣವೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಬಾಲಕರ ಮೃತದೇಹಗಳಾಗಿವೆ. ಅವರ ಗುರುತು ಹಾಗೂ ವಾಸಸ್ಥಳದ ವಿವರಗಳು ಇನ್ನು ತಿಳಿದುಬಂದಿಲ್ಲ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ಆದರ್ಶ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಸಾವಿಗೆ ನಿಖರವಾದ ಕಾರಣವನ್ನು ಪೊಲೀಸರು ಇನ್ನು ದೃಢಪಡಿಸಿಲ್ಲ. ಸಂತ್ರಸ್ತರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ಯೋಜಿಸಲಾಗಿದ್ದು, ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸ್ಥಳಕ್ಕೆ ನಗರದ ಡಿವೈಎಸ್ಪಿ ನಾಗರಾಜ್, ಆದರ್ಶ ನಗರ ಠಾಣೆ ಪಿಎಸ್ಐ ಸೀತಾರಾಮ ಲಮಾಣಿ ಹಾಗೂ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಭೇಟಿ ನೀಡಿ, ಶವಗಳನ್ನು ಕೆರೆಯಿಂದ ಹೊರ ತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತರ ಹೆಸರು, ವಿಳಾಸ ಇನ್ನೂ ತಿಳಿದು ಬಂದಿಲ್ಲ. ಕೆರೆಯ ಅಂಚಿನಲ್ಲಿ ತೇಲಿ ಬಂದ ಶವಗಳ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ತನಿಖೆ ಹಾಗೂ ಮರಣೋತ್ತರ ಪರೀಕ್ಷೆ ಬಳಿಕ ನಿಖರ ಮಾಹಿತಿ ತಿಳಿದು ಬರಲಿದೆ.