ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ಹಿನ್ನೆಲೆಯಲ್ಲಿ ಬಸವನಗುಡಿಯ ಕೆ.ಆರ್. ರಸ್ತೆಯಲ್ಲಿ ಬುಧವಾರ ಸಂಜೆ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪ್ರಕರಣ ಸಂಬಂಧ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಬುಧವಾರ ಸಂಜೆ ಸುಮಾರು 4 ಗಂಟೆಗೆ 2ನೇ ಮುಖ್ಯರಸ್ತೆ ಸಮೀಪ ಕೆ.ಆರ್. ರಸ್ತೆಯಲ್ಲಿ ಈದ್ ಮಿಲಾದ್ ಮೆರವಣಿಗೆ ಸಾಗುತ್ತಿತ್ತು.
ಇದೇ ಪ್ರದೇಶದಲ್ಲಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರ ಕಚೇರಿಯೂ ಇದೆ. ಘೋಷಣೆಗಳ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಘರ್ಷಣೆ ನಡೆದಿದೆ ಎನ್ನಲಾಗಿದೆ.
ಘರ್ಷಣೆಯಲ್ಲಿ ಮುರಳಿ ಎಂಬ ವ್ಯಕ್ತಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಕೆ. ವಾಮಶಿಕೃಷ್ಣ ಅವರು ಮಾತನಾಡಿದ್ದು, ಸಂಜೆ 4 ಗಂಟೆ ಸುಮಾರಿಗೆ ಘರ್ಷಣೆ ನಡೆದಿರುವ ಬಗ್ಗೆ ಮಾಹಿತಿ ಲಭಿಸಿತು. ತಕ್ಷಣವೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪೊಲೀಸ್ ಸಿಬ್ಬಂದಿಯೂ ಸ್ಥಳದಲ್ಲಿದ್ದರು. ಘಟನೆಯ ಕುರಿತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.