ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರು ಕೆಪಿಎಸ್ಸಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ನಿನ್ನೆ ಗುರುವಾರ ಅಪರಾಧ ತನಿಖಾ ದಳ (CID)ದ ಮುಂದೆ ತನಿಖೆಗೆ ಹಾಜರಾದರು.
ಸಿಐಡಿ ಅಧಿಕಾರಿಗಳು ಕೆಪಿಎಸ್ ಸಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಶೋಧ ನಡೆಸಿದ ಬಳಿಕ ನೀಡಿದ್ದ ನೊಟೀಸ್ ಗೆ ಸಾಹುಕಾರ್ ವಿಚಾರಣೆಗೆ ಹಾಜರಾಗಿದ್ದಾರೆ.
400 ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ KPSC ತೀವ್ರ ಟೀಕೆಗೆ ಗುರಿಯಾಗಿದೆ.
ಅಭ್ಯರ್ಥಿಗಳ ಆಯ್ಕೆಗಾಗಿ ಮಧ್ಯವರ್ತಿಗಳು ಕೆಲ ಅಭ್ಯರ್ಥಿಗಳಿಗೆ ಕರೆ ಮಾಡಿ ತಲಾ 70 ಲಕ್ಷದಿಂದ 80 ಲಕ್ಷ ರೂಪಾಯಿಗಳವರೆಗೆ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸರು ಎಫ್ಐಆರ್ಗಳನ್ನು ದಾಖಲಿಸಿದ್ದಾರೆ.
ಇದಲ್ಲದೆ, ಕೆಪಿಎಸ್ ಸಿ ಅಧಿಕಾರಿಗಳು ಹಲವು ಅಭ್ಯರ್ಥಿಗಳನ್ನು ರೆಸಾರ್ಟ್ಗೆ ಕರೆದೊಯ್ದು, ಉತ್ತರಗಳೊಂದಿಗೆ ಪ್ರಶ್ನೆಪತ್ರಿಕೆಗಳನ್ನು ನೀಡಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಹೆಚ್ಚಿನ ಅಂಕಗಳನ್ನು ಪಡೆದ ಕೆಲ ಅಭ್ಯರ್ಥಿಗಳು ಕೆಪಿಎಸ್ ಸಿಯ ಉನ್ನತ ಹುದ್ದೆಯಲ್ಲಿರುವವರ ಸಂಬಂಧಿಕರು ಎಂದು ಶಂಕಿಸಲಾಗಿದೆ.
ಸಾಹುಕಾರ್ ಹಾಗೂ ಇತರ ಕೆಲವರು ತನಿಖೆಯ ಭಾಗವಾಗಿ ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಆದರೆ, ಈ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ.
ಜುಲೈ 10ರಂದು ವಿಧಾನಸೌಧ ಪೊಲೀಸರು ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಸರ್ಕಾರಿ ಉದ್ಯೋಗಕ್ಕೆ 3ಬಿ ಮೀಸಲಾತಿ ವರ್ಗದಡಿ ಅರ್ಜಿ ಸಲ್ಲಿಸುವ ವೇಳೆ ಅವರು ಸುಳ್ಳು ಆದಾಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
ಇದಾದ ಬಳಿಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದರು. ಆದರೆ, ಹೈಕೋರ್ಟ್ ಅವರನ್ನು ಮರುನೇಮಕ ಮಾಡಿತ್ತು. ಇದೀಗ ಸಚಿವ ಸಂಪುಟದ ಶಿಫಾರಸಿನ ಆಧಾರದ ಮೇಲೆ ರಾಜ್ಯಪಾಲರು ಮಂಗಳವಾರ ಮತ್ತೊಮ್ಮೆ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದಾರೆ.