ನವದೆಹಲಿ: ಕರ್ನಾಟಕದ ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’ ಹಾಡಲು ನಿರ್ದಿಷ್ಟ ಧಾಟಿ ಮತ್ತು ಕಾಲಮಿತಿಯನ್ನು ನಿಗದಿಪಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಸರ್ಕಾರದ ಈ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವ ನ್ಯಾಯಾಲಯವು, ಈ ಕುರಿತು ಸಲ್ಲಿಕೆಯಾಗಿದ್ದ ವಿಶೇಷ ಅರ್ಜಿಯನ್ನು ವಜಾಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ವಿವಾದ?
ಸೆಪ್ಟೆಂಬರ್ 2022ರಲ್ಲಿ ಅಂದಿನ ಕರ್ನಾಟಕ ಸರ್ಕಾರವು ನಾಡಗೀತೆಯನ್ನು ಪ್ರಸಿದ್ಧ ಗಾಯಕ ದಿವಂಗತ ಮೈಸೂರು ಅನಂತಸ್ವಾಮಿ ಅವರು ಸಂಯೋಜಿಸಿರುವ ಧಾಟಿಯಲ್ಲೇ ಹಾಡಬೇಕು ಮತ್ತು ಅದರ ಒಟ್ಟು ಅವಧಿ 2 ನಿಮಿಷ 30 ಸೆಕೆಂಡುಗಳು (150 ಸೆಕೆಂಡ್) ಇರಬೇಕು ಎಂದು ಅಧಿಕೃತ ಆದೇಶ ಹೊರಡಿಸಿತ್ತು. ಆದರೆ, ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು, ಸರ್ಕಾರವು ಯಾವುದೇ ನಿರ್ದಿಷ್ಟ ರಾಗ ಅಥವಾ ಧಾಟಿಯಲ್ಲೇ ನಾಡಗೀತೆ ಹಾಡಬೇಕು ಎಂದು ಕಡ್ಡಾಯ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್, ಶಿಕ್ಷಣ ಕಾಯ್ದೆಯಡಿ ಇಂತಹ ನಿಯಮಗಳನ್ನು ರೂಪಿಸುವ ಪೂರ್ಣ ಅಧಿಕಾರ ಸರ್ಕಾರಕ್ಕಿದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತ್ತು.
ಇನ್ನು, ಹೈಕೋರ್ಟ್ ನೀಡಿದ್ದ ಇದೇ ತೀರ್ಪನ್ನು ಇದೀಗ ಸುಪ್ರೀಂಕೋರ್ಟ್ ಕೂಡ ಪುರಸ್ಕರಿಸಿದ್ದು, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಬಲವಾದ ಕಾರಣಗಳಿಲ್ಲ ಎಂದು ಸ್ಪಷ್ಟಪಡಿಸಿದೆ.
ಮುಂದುವರೆದು, ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹದೇವನ್ ಅವರಿದ್ದ ಪೀಠವು, ನಾಡಗೀತೆಯನ್ನು ಹಾಡುವಾಗ ಅದರ ರಾಗ (ಧಾಟಿ) ಮತ್ತು ಅವಧಿ ಎರಡರಲ್ಲೂ ಏಕರೂಪತೆ ಇರಬೇಕಾದುದು ಅತ್ಯಗತ್ಯ ಎಂದು ಕೋರ್ಟ್ ಸ್ಪಷ್ಟಪಡಿಸಿದ್ದು, ಸರ್ಕಾರದ ಆದೇಶದಿಂದ ಯಾವುದೇ ವ್ಯಕ್ತಿಯ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿಲ್ಲ. ತಜ್ಞರು ರೂಪಿಸಿರುವ ರಾಗವನ್ನು ಸರ್ಕಾರ ಅಧಿಕೃತಗೊಳಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.