ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನುಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಜನ್ಮ ಶತಮಾನೋತ್ಸವ ಸಮಾರಂಭವನ್ನು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಅವರ ಹೆಸರಿಡುವ ನಿರ್ಧಾರವನ್ನು ಇದೇ ಸಂದರ್ಭದಲ್ಲಿ ಪ್ರಕಟಿಸಿದ ಸಿಎಂ, ಗ್ರಾಮೀಣ ಆಡಳಿತಕ್ಕೆ ಹೆಗಡೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಅವರ ಜನ್ಮದಿನದಂದು ‘ರಾಮಕೃಷ್ಣ ಹೆಗಡೆ ಶ್ರೇಷ್ಠ ಪಂಚಾಯಿತಿ ಪ್ರಶಸ್ತಿ’ ನೀಡುವ ಕಾರ್ಯಕ್ರಮ ರೂಪಿಸುವಂತೆ ಆರ್ಡಿಪಿಆರ್ ಸಚಿವರೊಂದಿಗೆ ಚರ್ಚಿಸಿರುವುದಾಗಿ ಹೇಳಿದ್ದು ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಯೊಂದಕ್ಕೆ ರಾಮಕೃಷ್ಣ ಹೆಗಡೆ ಹೆಸರಿಡಲು ತೀರ್ಮಾನಿಸಿರುವುದಾಗಿಯೂ ಹೇಳಿದರು.
ರಾಮಕೃಷ್ಣ ಹೆಗಡೆ ಅವರು ಕೇವಲ ಅಧಿಕಾರ ನಡೆಸಿದ ನಾಯಕನಲ್ಲ. ಪಂಚಾಯತ್ನಿಂದ ಸಂಸತ್ತಿನವರೆಗೆ ಹೊಸ ನಾಯಕತ್ವವನ್ನು ಸೃಷ್ಟಿಸಿದ ನಾಯಕ ಎಂದು ಅವರು ಬಣ್ಣಿಸಿದರು. ಒಬ್ಬ ನಾಯಕನ ಕೆಲಸ ಕೇವಲ ಹಿಂಬಾಲಕರನ್ನು ಸೃಷ್ಟಿಸುವುದಲ್ಲ. ನಾಯಕರನ್ನು ಸೃಷ್ಟಿಸುವುದೇ ನಿಜವಾದ ನಾಯಕತ್ವ. ರಾಮಕೃಷ್ಣ ಹೆಗಡೆ ಅವರ ಮೂಲ ತತ್ವ ಇದೇ ಆಗಿತ್ತು. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕರ್ನಾಟಕದ ಪ್ರಯೋಗಗಳು ದೇಶಕ್ಕೆ ಮಾದರಿಯಾಗಿತ್ತು. ನಂತರ ರಾಜೀವ್ ಗಾಂಧಿ ಸರ್ಕಾರದ ಅವಧಿಯಲ್ಲಿ 73 ಮತ್ತು 74ನೇ ಸಂವಿಧಾನ ತಿದ್ದುಪಡಿಗಳಿಗೆ ಈ ಚಿಂತನೆ ಪ್ರೇರಣೆಯಾಯಿತು ಎಂದರು.
ಹೆಗಡೆ ಅವರು ಜಾತಿ ಆಧಾರಿತ ರಾಜಕಾರಣಕ್ಕೆ ಸೀಮಿತವಾಗದೆ ಮೌಲ್ಯಾಧಾರಿತ ರಾಜಕಾರಣ ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದ್ದರು. ಅವರ ನಾಯಕತ್ವವನ್ನು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರು ಒಪ್ಪಿಕೊಂಡಿದ್ದರು. ಅಧಿಕಾರದಲ್ಲಿದ್ದಾಗಲೂ ಜನಸೇವೆ ಮತ್ತು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಕೆಲಸ ಮಾಡಿದ್ದರು ಎಂದು ಹೇಳಿದರು. ರಾಮಕೃಷ್ಣ ಹೆಗಡೆ ಅವರ ಬದುಕು ಒಂದು ಡಿಕ್ಷನರಿಯಿದ್ದಂತೆ. ಅವರ ಆಚಾರ-ವಿಚಾರಗಳನ್ನು ನೋಡಿಕೊಂಡು ನಾವು ಅನೇಕ ವಿಚಾರಗಳನ್ನು ಕಲಿಯಬಹುದು. ಅಧಿಕಾರವನ್ನು ಶಕ್ತಿಯ ಸಂಕೇತವಾಗಿ ಅಲ್ಲ, ಜನಸೇವೆಗೆ ದೊರೆತ ಅವಕಾಶವಾಗಿ ನೋಡಬೇಕು ಎಂಬ ಸಂದೇಶವನ್ನು ಅವರು ನೀಡಿದ್ದರು ಎಂದು ಹೇಳಿದರು.